ಬಿಬಿಎಂಪಿ ಆವರಣದಲ್ಲಿ ಸ್ವಾತಂತ್ರೋತ್ಸವ
ಬೆಂಗಳೂರು, ಆ.15: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿ ಆವರಣದಲ್ಲಿ ಮೇಯರ್ ಜಿ.ಪದ್ಮಾವತಿ 71ನೆ ಸ್ವಾತಂತ್ರೋತ್ಸವದ ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಸ್ವಾತಂತ್ರದ ಆಶಯಗಳಿಗಾಗಿ ದೇಶದಲ್ಲಿ ಇದುವರೆಗೂ ಅಧಿಕಾರ ನಡೆಸಿದ ನಮ್ಮ ಪಕ್ಷ ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿ ಮಾಡಿದೆ. ಅದೇ ರೀತಿಯಲ್ಲಿ ಹಸಿವು ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದೆ. ಅದೇ ರೀತಿ ನಗರದಲ್ಲಿ ಯಾರೂ ಹಸಿವಿನಿಂದ ನರಳಬಾರದು ಎಂಬ ಉದ್ದೇಶದಿಂದ ‘ಇಂದಿರಾ ಕ್ಯಾಟೀನ್’ ಆರಂಭಿಸಲಾಗುತ್ತಿದೆ ಎಂದರು.
ಸಂವಿಧಾನದ ಆಶಯದಂತೆ ನಾಡು ಕಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹಾಗೂ ಸ್ಥಳೀಯ ಸಂಸ್ಥೆಗಳು ನಿರಂತರವಾಗಿ ಶ್ರಮಿಸುತ್ತಿವೆ. ಆ ನಿಟ್ಟಿನಲ್ಲಿ ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಪಾಲಿಕೆ ವತಿಯಿಂದ ಹಲವಾರು ಯೋಜನೆಗಳನ್ನು ಈ ವರ್ಷ ಘೋಷಣೆ ಮಾಡಲಾಗಿದ. ವೇತನ ಹೆಚ್ಚಳ, ಬ್ಯಾಂಕ್ ಖಾತೆಗೆ ನೇರವಾಗಿ ಹಣ ಸಂದಾಯ, ವಿದೇಶಿ ಪ್ರವಾಸ ಹಾಗೂ ಪಾಲಿಕೆಯಿಂದ ಶಾಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ ನಂತರ ಬೆಂಗಳೂರು ನಗರ ಅಭಿವೃದ್ಧಿಗಾಗಿ ವಿಶೇಷವಾದ ಕೊಡುಗೆ ನೀಡಿದ್ದಾರೆ ಎಂದರು. ಈ ವೇಳೆ ಪಾಲಿಕೆ ವತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.