ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಿರಾಳಕೊಪ್ಪ ಪಪಂನ ಇಬ್ಬರ ಸದಸ್ಯತ್ವ ರದ್ದು
ಶಿವಮೊಗ್ಗ, ಅ.19: ಪಕ್ಷಾಂತರ ನಿಷೇಧ ಕಾಯ್ದೆಯಡಿ ಜಿಲ್ಲೆಯ ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪಟ್ಟಣ ಪಂಚಾಯತ್ನ ಇಬ್ಬರು ಸದಸ್ಯರ ಸದಸ್ಯತ್ವ ರದ್ದುಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಚಿಹ್ನೆಯಡಿ ಆಯ್ಕೆಯಾಗಿದ್ದ 4ನೆ ವಾರ್ಡ್ನ ಸದಸ್ಯ ಎ. ಸಮೀವುಲ್ಲಾ ಹಾಗೂ 7ನೆ ವಾರ್ಡ್ನ ಬಿ. ಗೀತಾ ಕೇದಾರೇಶ್ವರ ಸದಸ್ಯತ್ವದಿಂದ ಅನರ್ಹಗೊಂಡವವರು.
2016 ಸೆಪ್ಟೆಂಬರ್ 17ರಂದು ಶಿರಾಳಕೊಪ್ಪ ಪಟ್ಟಣ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯ ವೇಳೆ ಕಾಂಗ್ರೆಸ್ ಪಕ್ಷದ ವಿಪ್ ಉಲ್ಲಂಘಿಸಿದ್ದ ಆರೋಪ ಕೇಳಿ ಬಂದಿತ್ತು.
ಪಕ್ಷದ ಆದೇಶಕ್ಕೆ ವಿರುದ್ಧವಾಗಿ ಬಿಜೆಪಿ ಪಕ್ಷದ ಪರವಾಗಿ ಮತದಾನ ಮಾಡಿದ್ದರು. ಈ ಕುರಿತಂತೆ ಸದಸ್ಯ ಜಾಫರ್ ಎಂಬವರು 2016ರ ಅಕ್ಟೋಬರ್ನಲ್ಲಿ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿ, ವಿಪ್ ಉಲ್ಲಂಘಿಸಿದವರ ಸದಸ್ಯತ್ವ ಅನರ್ಹಗೊಳಿಸಿ ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದ್ದರು.
ಈ ಬಗ್ಗೆ ಡಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಇಬ್ಬರ ಸದಸ್ಯರ ಸದಸ್ಯತ್ವ ರದ್ದುಗೊಳಿಸಿ ಆದೇಶಿಸಿದ್ದಾರೆ.
Next Story