ಪ್ರತ್ಯೇಕ ಅಭಿವೃದ್ಧಿ ನಿಗಮಕ್ಕೆ ಸವಿತಾ ಸಮಾಜ ಒತ್ತಾಯ
ಮಡಿಕೇರಿ, ಅ.19: ಸವಿತಾ ಸಮಾಜದ ಅಭ್ಯುದಯಕ್ಕಾಗಿ 2018-19ನೆ ಸಾಲಿನ ಮುಂಗಡ ಪತ್ರದಲ್ಲಿ ಪ್ರತ್ಯೇಕ ಅಭಿವೃದ್ಧಿ ನಿಗಮ ರಚಿಸಬೇಕೆಂದು ಕರ್ನಾಟಕ ರಾಜ್ಯ ಸವಿತಾ ಸಮಾಜದ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ.
ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ಪ್ರತಿನಿಧಿ ವೈ. ಪುಟ್ಟರಾಜು, ಅಭಿವೃದ್ಧಿ ನಿಗಮಕ್ಕಾಗಿ ಒತ್ತಾಯಿಸಿ ಅ.24ರಂದು ಬೆಳಗ್ಗೆ 9:30ಕ್ಕೆ ನಗರದ ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ತಿಳಿಸಿದರು.
ಪ್ರತಿಭಟನೆಯಲ್ಲಿ ಸವಿತಾ ಸಮಾಜದ ಬೇಡಿಕೆಗಳ ಕುರಿತು ಜಿಲ್ಲಾಡಳಿತದ ಗಮನ ಸೆಳೆಯುವುದಲ್ಲದೆ, ಅಭಿವೃದ್ಧಿ ನಿಗಮ ಸ್ಥಾಪನೆಗಾಗಿ ಒತ್ತಾಯಿಸುವ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ರವಾನಿಸಲಾಗುವುದೆಂದು ತಿಳಿಸಿದರು.
ಮನವಿ ಮೂಲಕ ಸಮಾಜ ಕಲ್ಯಾಣ ಸಚಿವರಿಗೂ ಸವಿತಾ ಸಮಾಜದ ಸಂಕಷ್ಟದ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು. ಆರ್ಥಿಕವಾಗಿ ಹಿಂದುಳಿದಿರುವ ಸಮಾಜಕ್ಕೆ ಪ್ರತ್ಯೇಕವಾಗಿ ಅನುದಾನವನ್ನು ಮೀಸಲಿಡುವುದಕ್ಕಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮದ ಸ್ಥಾಪನೆ ಅಗತ್ಯವಿದೆಯೆಂದು ಪುಟ್ಟರಾಜು ಅಭಿಪ್ರಾಯಪಟ್ಟರು.
ಮಡಿಕೇರಿ ತಾಲೂಕು ಅಧ್ಯಕ್ಷ ಎಂ.ಟಿ.ಮಧುಹಾಗೂ ಜಿಲ್ಲಾಧ್ಯಕ್ಷ ಎಚ್.ಎನ್. ವೆಂಕಟೇಶ್ ಮಾತನಾಡಿದರು.