ಪಡೀಲ್ ರೈಲ್ವೆ ಕೆಳಸೇತುವೆ ಲೋಕಾರ್ಪಣೆ
ಮಂಗಳೂರು, ನ.15: ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಪಡೀಲ್-ಕೊಡಕ್ಕಲ್ ಬಳಿ ನಿರ್ಮಿಸಲಾಗಿರುವ ರೈಲ್ವೆ ಕೆಳಸೇತುವೆ ಇಂದು ಲೋಕಾರ್ಪಣೆಗೊಂಡಿತು.
ಸುಮಾರು 16.50 ಕೋ.ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಕೆಳಸೇತುವೆಯನ್ನು ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಸುರತ್ಕಲ್- ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯನ್ನು ಸಾಗರ್ಮಾಲ ಯೋಜನೆಯಡಿ 500 ಕೋ.ರೂ. ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸರಕಾರ ಮಂಜೂರಾತಿ ನೀಡಿದೆ ಎಂದರು.
ಈ ಸಂದರ್ಭ ಕಾರ್ಪೊರೇಟರ್ಗಳಾದ ಪ್ರಕಾಶ್, ಸುಧೀರ್ ಶೆಟ್ಟಿ ಕಣ್ಣೂರು, ರೂಪಾ ಡಿ. ಬಂಗೇರ, ವಿಜಯ್ ಕುಮಾರ್, ರೈಲ್ವೇ ಸಲಹಾ ಸಮಿತಿ ಸದಸ್ಯ ಅಹ್ಮದ್ ಬಾವ, ಗುತ್ತಿಗೆದಾರ ಅರುಣ್ ಉಪಸ್ಥಿತರಿದ್ದರು.
ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಅಜಿತ್ ಸ್ವಾಗತಿಸಿದರು.
ಪಡೀಲ್-ಕೊಡಕ್ಕಲ್ ಬಳಿ ಪ್ರತಿನಿತ್ಯ ಟ್ರಾಫಿಕ್ ಜಾಮ್, ಪ್ರತಿನಿತ್ಯ ಗಂಟೆಗಟ್ಟಲೆ ವಾಹನಗಳು ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದವು. ವಾಹನ ಚಾಲಕರು ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದರು. ಇದೀಗ ಸಮಸ್ಯೆ ಬಗೆಹರಿದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಡೀಲ್ ಬಳಿ ನೂತನ ರೈಲ್ವೆ ಅಂಡರಪಾಸ್ ಇಂದು ವಾಹನ ಸಂಚಾರಕ್ಕೆ ಮುಕ್ತ ಮಾಡಲಾಗಿದೆ .