ಸರಕಾರಿ ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ಚಿಕಿತ್ಸೆ ಲಭ್ಯ: ಡಿಎಚ್ಒ
ಸರಕಾರಿ ವೈದ್ಯರು, ವೈದ್ಯೇತರರ ರಜೆ ರದ್ದು
ಮಂಗಳೂರು, ನ.17: ರಾಜ್ಯದಲ್ಲಿನ ಖಾಸಗಿ ವೈದ್ಯರು ಹಾಗೂ ಖಾಸಗಿ ಸಂಸ್ಥೆಗಳು ತಮ್ಮ ಆಸ್ಪತ್ರೆಗಳನ್ನು ಬಂದ್ ಮಾಡಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಸರಕಾರಿ ಆರೋಗ್ಯ ಸಂಸ್ಥೆಗಳ ವೈದ್ಯರು ಮತ್ತು ವೈದ್ಯೇತರ ಸಿಬ್ಬಂದಿ ವರ್ಗದ ರಜೆಯನ್ನು ರದ್ದುಪಡಿಸಿ ರೋಗಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ವೈದ್ಯಕೀಯ ಚಿಕಿತ್ಸೆ ನೀಡಲು ಸನ್ನದ್ಧ ಸ್ಥಿತಿಯಲ್ಲಿದೆ ಎಂದು ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿ ಡಾ. ರಾಮಕೃಷ್ಣ ರಾವ್ ತಿಳಿಸಿದ್ದಾರೆ.
ತ್ವರಿತ ಮತ್ತು ಸಮರ್ಪಕ ಆರೋಗ್ಯ ಸೇವೆ ಹಾಗೂ ಔಷಧಿಗಳ ಕೊರತೆಯಾಗದಂತೆ, ಎಲ್ಲ ವೈದ್ಯಾಧಿಕಾರಿಗಳು/ವೈದ್ಯೇತರ ಸಿಬ್ಬಂದಿ ವರ್ಗ ಕೇಂದ್ರಸ್ಥಾನದಲ್ಲಿ ಕಡ್ಡಾಯವಾಗಿ ಹಾಜರಿರಲು, ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕರ್ತವ್ಯ ನಿರ್ವಹಿಸುವಂತೆ ಎಲ್ಲ ಅಧೀನ ಸಂಸ್ಥೆಯ ಮುಖ್ಯಸ್ಥರುಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರಿಗೆ ಚಿಕಿತ್ಸೆಯ ಸಂದರ್ಭ ಯಾವುದೇ ಸಮಸ್ಯೆ ಎದುರಾಗದಂತೆ ಸೇವೆ ನೀಡಲು ಆರೋಗ್ಯ ಇಲಾಖೆಯು ಎಲ್ಲಾ ರೀತಿಯಿಂದಲೂ ಸಿದ್ಧವಾಗಿದೆ. ಅದಕ್ಕಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ/ಸಮುದಾಯ ಆರೋಗ್ಯ ಕೇಂದ್ರ/ತಾಲೂಕು ಆಸ್ಪತ್ರೆ/ಜಿಲ್ಲಾ ಆಸ್ಪತ್ರೆಗಳನ್ನು ಸಂಪರ್ಕಿಸಬಹುದು ಎಂದು ಡಿಎಚ್ಒ ಮನವಿ ಮಾಡಿದ್ದಾರೆ.