ಡಿ.9: ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪದವಿ ಪ್ರಧಾನ ಸಮಾರಂಭ
ಪುತ್ತೂರು, ಡಿ.7: ನಗರದ ವಿವೇಕಾನಂದ ಇಂಜಿಯರಿಂಗ್ ಕಾಲೇಜಿನಲ್ಲಿ 2016-17ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭ ಡಿ.9ರಂದು ಪೂರ್ವಾಹ್ನ ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಎಸ್. ಗೋವಿಂದೇ ಗೌಡ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಇಂಜಿನಿಯರಿಂಗ್ ಪದವಿ ಮತ್ತು ಎಂಬಿಎ ಸ್ನಾತಕ್ಕೋತ್ತರ ಪದವಿ ಪಡೆದ 400 ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪದವಿ ಪ್ರದಾನ ಮಾಡಲಾಗುವುದು. ಅಲ್ಲದೇ, ಗರಿಷ್ಠ ಅಂಕಗಳನ್ನು ಗಳಿಸಿದ ಪ್ರತಿಭಾವಂತ 9 ವಿದ್ಯಾರ್ಥಿಗಳಿಗೆ ಚಿನ್ನದ ನಾಣ್ಯವನ್ನು ನೀಡಿ ಗೌರವಿಸಲಾಗುವುದು ಎಂದರು.
ಸಮಾರಂಭದಲ್ಲಿ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಕರಿಸಿದ್ದಪ್ಪಮತ್ತು ಇಸ್ರೋದ ವಿಶ್ರಾಂತ ಹಿರಿಯ ವಿಜ್ಞಾನಿ ಎಂ.ಕೃಷ್ಣಸ್ವಾಮಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್, ಸಂಚಾಲಕ ರಾಧಾಕೃಷ್ಣ ಭಕ್ತ, ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇ ಗೌಡ ಉಪಸ್ಥಿತರಿರುವರು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ.ಭಾಸ್ಕರ್ ಕುಲಕರ್ಣಿ ಮತ್ತು ಮಾಧ್ಯಮ ಸಂಚಾಲಕ ಪ್ರೊ.ಆ್ಯಶ್ಲೆ ಡಿಸೋಜ ಉಪಸ್ಥಿತರಿದ್ದರು