ತಪ್ಪು ಸಾಬೀತಾದರೆ ಆರೋಪಿಗೆ ವಿಮಾನ ಪ್ರಯಾಣ ನಿರ್ಬಂಧ: ಸಚಿವ ಜಯಂತ್ ಸಿನ್ಹಾ
ರಾಷ್ಟ್ರಪ್ರಶಸ್ತಿ ವಿಜೇತ ನಟಿಗೆ ಲೈಂಗಿಕ ಕಿರುಕುಳ ಪ್ರಕರಣ
ಹೊಸದಿಲ್ಲಿ, ಡಿ.10: ರಾಷ್ಟ್ರಪ್ರಶಸ್ತಿ ವಿಜೇತ ನಟಿಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದಲ್ಲಿ ಆರೋಪಿಗೆ ವಿಮಾನ ಪ್ರಯಾಣಕ್ಕೆ ನಿರ್ಬಂಧ ಹೇರಲಾಗುವುದು ಎಂದು ಕಿರಿಯ ನಾಗರಿಕ ವಿಮಾನಯಾನ ಸಚಿವ ಜಯಂತ್ ಸಿನ್ಹಾ ಹೇಳಿದ್ದಾರೆ.
ಶನಿವಾರ ದಿಲ್ಲಿಯಲ್ಲಿ ವಿಮಾನ ಲ್ಯಾಂಡ್ ಆದ ತಕ್ಷಣ ನಟಿ ಇನ್ ಸ್ಟಾಗ್ರಾಮ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದು, ವಿಮಾನದಲ್ಲಿದ್ದ ಮಧ್ಯವಯಸ್ಕನೊಬ್ಬ ತನ್ನನ್ನು ಅಸಭ್ಯವಾಗಿ ಸ್ಪರ್ಶಿಸಿದ್ದ ಎಂದು ಆರೋಪಿಸಿದ್ದರು.
ಈ ಬಗ್ಗೆ ಸಚಿವರು ಪ್ರತಿಕ್ರಿಯಿಸಿದ್ದು, ಇಲಾಖೆಯು ನಟಿಯ ಬೆಂಬಲಕ್ಕಿದೆ ಹಾಗು ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಪ್ರಯಾಣ ನಿರ್ಬಂಧ ಮಾರ್ಗದರ್ಶಿ ಸೂತ್ರದ ಪ್ರಕಾರ ಯಾವುದೇ ಪ್ರಯಾಣಿಕನಿಗೆ ದೇಶದಲ್ಲಿ ವಿಮಾನದಲ್ಲಿ ಪ್ರಯಾಣಿಸುವುದನ್ನು ಮೂರು ತಿಂಗಳು ಅಥವಾ ಜೀವನಪರ್ಯಂತ ನಿಷೇಧಿಸಬಹುದಾಗಿದೆ.
ಈ ಬಗ್ಗೆ ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
Next Story