ಹಿರಿಯಡ್ಕ: ಉದ್ಯೋಗ ಮಾಹಿತಿ ಶಿಬಿರ
ಉಡುಪಿ, ಜ.13: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇಲ್ಲಿನ ಉದ್ಯೋಗ ಮಾಹಿತಿ ಕೋಶ ಮತ್ತು ಐಕ್ಯೂಎಸಿಯ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ‘ಕಾರ್ಪೋರೇಟ್ ಉದ್ಯೋಗಕ್ಕೆ ನಾನು ಸನ್ನದ್ಧನಾ?’ ಎಂಬ ವಿಷಯದ ಕುರಿತ ಒಂದು ದಿನದ ಕಾರ್ಯಗಾರ ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ತ್ರಿಶಾ ಕ್ಲಾಸಸ್ನ ಪ್ರಾಂಶುಪಾಲ ಪ್ರೊ. ಚಂದನ್ ರಾವ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಮೂಡಿಸುವುದ ರೊಂದಿಗೆ ಕಾರ್ಪೋರೇಟ್ ವಲಯದಲ್ಲಿ ಕೆಲಸಗಿಟ್ಟಿಸಿಕೊಳ್ಳಲು ಬೇಕಾದ ಕೌಶಲ್ಯಗಳನ್ನು, ಜ್ಞಾನವನ್ನು ಹೇಗೆ ಪಡೆಯಬೇಕು ಎಂಬುದರ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಮೂಹ ಚರ್ಚೆ, ಅಣಕು ಸಂದರ್ಶನವನ್ನು ನಡೆಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಜಿ.ಆರ್. ರಾಯ್ಕರ್ ಅಧ್ಯಕ್ಷತೆ ವಹಿಸಿದ್ದರು. ಉದ್ಯೋಗ ಮಾಹಿತಿ ಕೋಶದ ಸಂಚಾಲಕ ಹಾಗೂ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ದಿನೇಶ್ ಎಂ. ಪ್ರಾಸ್ತಾವಿಕ ನುಡಿಗಳೊಂದಿಗೆ ಕಾರ್ಯಾಗಾರದ ಪ್ರಾಮುಖ್ಯತೆಯನ್ನು ತಿಳಿಸಿದರು.
ಐಕ್ಯೂಎಸಿನ ಸಂಚಾಲಕ ಹಾಗೂ ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಸುಮನಾ ಬಿ. ಮಾತನಾಡಿದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಚಾಲಕ ಗೌತಮ್, ಪ್ರೀತೇಶ್, ಸುಚಿತಾ ಉಪಸ್ಥಿತರಿದ್ದರು. ಸೌಜನ್ಯ ಸ್ವಾಗತಿಸಿ, ಶಿವರಾಜ್ ವಂದಿಸಿದರು. ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.