ಬೆಂಗಳೂರು: ಜ.16 ರಂದು ಕಾಂಗ್ರೆಸ್ ಅಲ್ಪಸಂಖ್ಯಾತ ಕಾರ್ಯಕರ್ತರ ಸಮಾವೇಶ
ಬೆಂಗಳೂರು, ಜ.13: ಕಾಂಗ್ರೆಸ್ನ ಅಲ್ಪಸಂಖ್ಯಾತ ವಿಭಾಗದ ವತಿಯಿಂದ ಜಿಲ್ಲಾ ಮಟ್ಟದ ಪಕ್ಷದ ಅಲ್ಪಸಂಖ್ಯಾತ ಕಾರ್ಯಕರ್ತರ ಸಮಾವೇಶವನ್ನು ಜ.16 ರಂದು ಕೆ.ಜಿ.ಹಳ್ಳಿಯಲ್ಲಿರುವ ಅರೆಬಿಕ್ ಕಾಲೇಜು ರಸ್ತೆಯಲ್ಲಿರುವ ಸಿ.ಎಂ.ಎ ಗ್ರಾಂಡ್ ಕನ್ವೆನ್ಷನ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಇರ್ಷಾದ್ ಅಹಮ್ಮದ್ ಶೇಕ್, ರಾಜ್ಯ ಸರಕಾರ ಐದು ವರ್ಷಗಳ ಆಡಳಿತಾವಧಿಯಲ್ಲಿ 3850 ಕೋಟಿ ರೂ.ಗಳನ್ನು ಅಲ್ಪಸಂಖ್ಯಾರ ಅಭಿವೃದ್ಧಿಗಾಗಿ ಮೀಸಲಿಟ್ಟಿದೆ. ಈ ನಿಟ್ಟಿನಲ್ಲಿ ಸರಕಾರದ ಸಾಧನೆಗಳನ್ನು ಸಮುದಾಯದ ಪ್ರತಿಯೊಬ್ಬರಿಗೂ ತಲುಪಿಸಲು ಹಾಗೂ ಕಾರ್ಯಕರ್ತರಿಗೆ ಸ್ಪೂರ್ತಿ ತುಂಬುವ ಸಲುವಾಗಿ ಈ ಸಮಾವೇಶ ಆಯೋಜಿಸಲಾಗಿದೆ ಎಂದು ಹೇಳಿದರು.
ಸಮಾವೇಶವನ್ನು ಕೆಪಿಸಿಸಿ ರಾಜ್ಯಾಧ್ಯಕ್ಷ ಡಾ.ಜಿ.ಪರಮೇಶ್ವರ್ ಉದ್ಘಾಟಿಸಲಿದ್ದು, ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಮಧು ಯಾಶ್ಕಿ ಗೌಡ ಸೇರಿದಂತೆ ನಗರ ಜಿಲ್ಲಾ ವ್ಯಾಪ್ತಿಯ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ತು ಸದಸ್ಯರು, ಪಾಲಿಕೆ ಸದಸ್ಯರು ಹಾಗೂ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಉತ್ತರ ಜಿಲ್ಲಾಧ್ಯಕ್ಷ ಫಾರೂಕ್ ಪಾಷ, ಹಿಜಾಯಿದ್ ಮುಲ್ಲಾ ಖಾನ್, ಬ್ರಿಜೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.