ಸುಪ್ರೀಂ ಕೋರ್ಟ್ನಿಂದ ರಾಜ್ಯಕ್ಕೆ ಪರಿಹಾರ ಸಿಕ್ಕಿದೆ: ಸಿದ್ದರಾಮಯ್ಯ
ಕಾವೇರಿ ನೀರು ಹಂಚಿಕೆ ವಿವಾದ ಪ್ರಕರಣ
ಬೆಂಗಳೂರು, ಫೆ.16: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ಯದ ಪರವಾಗಿ ಕೆಲವೊಂದು ವಿಷಯಗಳಲ್ಲಿ ಪರಿಹಾರ ನೀಡಿರುವುದು ಸಂತಸ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕೂಟ ವ್ಯವಸ್ಥೆಯಲ್ಲಿ ಸೋಲು, ಗೆಲುವಿನ ಪ್ರಶ್ನೆ ಬರುವುದಿಲ್ಲ. ಕಾವೇರಿ ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ನಮ್ಮ ವಕೀಲರು ಸುಪ್ರೀಂ ಕೋರ್ಟ್ನಲ್ಲಿ ವಸ್ತುನಿಷ್ಠವಾಗಿ ವಾದ ಮಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಹೆಚ್ಚುವರಿಯಾಗಿ 14.75ಟಿಎಂಸಿ ನೀರು ದೊರಕಿದೆ ಎಂದು ತಿಳಿಸಿದರು.
ಕುಡಿಯುವ ನೀರಿನ ಸಲುವಾಗಿ ಬೆಂಗಳೂರಿಗೆ ಹೆಚ್ಚುವರಿಯಾಗಿ 4.75ಟಿಎಂಸಿ ನೀರನ್ನು ಬಳಸಿಕೊಳ್ಳಲು ಸರ್ವೋಚ್ಚ ನ್ಯಾಯಾಲಯವು ಅನುಮತಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯವು ಸಾಮಾನ್ಯ ವರ್ಷದಲ್ಲಿ ಬಿಳಿಗುಂಡ್ಲು ಮಾಪನ ಕೇಂದ್ರದಿಂದ ತಮಿಳುನಾಡಿಗೆ ನೀಡಬೇಕಾದ ನೀರಿನ ಪ್ರಮಾಣ 177.25 ಟಿಎಂಸಿ ಆಗಿದ್ದು, ರಾಜ್ಯಕ್ಕೆ 14.75 ಟಿಎಂಸಿ ನೀರು ಹೆಚ್ಚುವರಿಯಾಗಿ ಲಭಿಸಲಿದೆ ಎಂದು ಅವರು ತಿಳಿಸಿದರು.