ಜೆಎನ್ಯು ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ: ತನಿಖೆಗೆ ಆದೇಶಿಸಿದ ರಾಷ್ಟ್ರೀಯ ಮಹಿಳಾ ಆಯೋಗ
ಹೊಸದಿಲ್ಲಿ, ಮಾ. 24: ಇಲ್ಲಿ ನಡೆದ ಪ್ರತಿಭಟನಾ ರ್ಯಾಲಿ ಸಂದರ್ಭ ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾನಿಲಯ (ಜೆಎನ್ಯು)ದ ವಿದ್ಯಾರ್ಥಿಗಳು ಹಾಗೂ ಪತ್ರಕರ್ತೆಯರ ಮೇಲೆ ನಡೆದ ಹಲ್ಲೆ ಘಟನೆ ಬಗ್ಗೆ ತನಿಖೆಗೆ ನಡೆಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಆದೇಶಿಸಿದೆ.
ಶೈಕ್ಷಣಿಕ ಸ್ವಾತಂತ್ರ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಜೆಎನ್ಯುನ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಸಂಸತ್ಭವನಕ್ಕೆ ಶುಕ್ರವಾರ ನಡೆಸಿದ ರ್ಯಾಲಿಯನ್ನು ತಡೆಯಲಾಗಿತ್ತು. ಈ ಸಂದರ್ಭ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು ಹಾಗೂ ಜಲಫಿರಂಗಿ ಬಳಸಿದ್ದರು.
‘‘ನಾವು ತನಿಖೆಗೆ ಆದೇಶಿಸಿದ್ದೇವೆ. ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಲು ತಂಡವೊಂದನ್ನು ಕಳುಹಿಸಿಕೊಟ್ಟಿದ್ದೇವೆ.’’ ಎಂದು ಎನ್ಸಿಡಬ್ಲುನ ಕಾರ್ಯಕಾರಿ ಅಧ್ಯಕ್ಷೆ ರೇಖಾ ಶರ್ಮಾ ತಿಳಿಸಿದ್ದಾರೆ.
ಪೊಲೀಸರು ಅಪ್ರಚೋದಿತವಾಗಿ ದಾಳಿ ನಡೆಸಿದರು ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಹೇಳಿದ್ದಾರೆ. ಸಮವಸ್ತ್ರದಲ್ಲಿದ್ದ ವ್ಯಕ್ತಿಯೋರ್ವ ತನ್ನನ್ನು ತಡವರಿಸಿ ಅಶ್ಲೀಲವಾಗಿ ನಡೆದುಕೊಂಡರು ಹಾಗೂ ಜಾಗ ಖಾಲಿ ಮಾಡುವಂತೆ ಹೇಳಿದರು ಎಂದು ಪತ್ರಕರ್ತೆಯೊಬ್ಬರು ತಿಳಿಸಿದ್ದಾರೆ.
ರಾಷ್ಟ್ರೀಯ ಮಹಿಳಾ ಮತ್ತು ಮಕ್ಕಳ ಆಯೋಗ ವಿಶ್ವವಿದ್ಯಾನಿಲಯದ ಕ್ಯಾಂಪಸ್ನಿಂದ ನಡೆಸಲಾಗಿದ್ದ ಪಾದಯಾತ್ರೆಯನ್ನು ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆ ಹಾಗೂ ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾನಿಲಯದ ಅಧ್ಯಾಪಕರ ಸಂಘಟನೆ ಆಯೋಜಿಸಿತ್ತು.