ಜೂ.11 ರಂದು ವಿಧಾನ ಪರಿಷತ್ ಚುನಾವಣೆ
ಬೆಂಗಳೂರು, ಮೇ 22: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 11 ಸದಸ್ಯರನ್ನು ಆಯ್ಕೆ ಮಾಡಲು ಜೂ.11ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಘೋಷಣೆಯಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಮೇ 24 ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, 31ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನ, ಜೂ.4ರಂದು ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದೆ.
ಜೂ.11ರಂದು ಚುನಾವಣೆ ನಡೆಯಲಿದ್ದು, ಅಂದು ಸಂಜೆಯೆ ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿಯ ಐದು, ಕಾಂಗ್ರೆಸ್ ಪಕ್ಷದ ಐದು ಹಾಗೂ ಜೆಡಿಎಸ್ ಪಕ್ಷದಿಂದ ತೆರವಾಗಲಿರುವ ಒಂದು ಸ್ಥಾನಕ್ಕೆ ಈ ಚುನಾವಣೆ ನಡೆಯಲಿದೆ.
ಬಿಜೆಪಿ ಸದಸ್ಯರಾದ ಬಿ.ಜೆ.ಪುಟ್ಟಸ್ವಾಮಿ, ಡಿ.ಎಸ್.ವೀರಯ್ಯ, ಸೋಮಣ್ಣ ಬೇವಿನಮರದ್, ರಘುನಾಥರಾವ್ ಮಲ್ಕಾಪುರೆ, ಭಾನುಪ್ರಕಾಶ್, ಕಾಂಗ್ರೆಸ್ ಪಕ್ಷದ ಸಿ.ಎಂ.ಇಬ್ರಾಹೀಂ, ಎಂ.ಆರ್.ಸೀತಾರಾಂ, ಮೋಟಮ್ಮ, ಕೆ.ಗೋವಿಂದರಾಜು, ಭೈರತಿ ಸುರೇಶ್ ಹಾಗೂ ಜೆಡಿಎಸ್ ಪಕ್ಷದ ಸೈಯದ್ ಮುದೀರ್ ಆಗಾ ಜೂ.17ರಂದು ನಿವೃತ್ತರಾಗಲಿದ್ದಾರೆ.
Next Story