ವಿಟ್ಲ: ರಸ್ತೆ ಅಪಘಾತಕ್ಕೆ ದ್ವಿಚಕ್ರ ವಾಹನ ಸವಾರ ಬಲಿ
ಮುಹಮ್ಮದ್ ಸಫ್ವಾನ್
ಬಂಟ್ವಾಳ, ಜೂ. 19: ವಾಹನವೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಎಂಬಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ವಿಟ್ಲ ಕಸಬಾ ಗ್ರಾಮದ ಪಳಿಕೆ ಚೆಂಡೆಗುಳಿ ನಿವಾಸಿ ಮುಹಮ್ಮದ್ ಅವರ ಪುತ್ರ ಮುಹಮ್ಮದ್ ಸಫ್ವಾನ್ (18) ಮೃತ ಯುವಕ ಎಂದು ಗುರುತಿಸಲಾಗಿದೆ. ಮುಹಮ್ಮದ್ ಸಫ್ವಾನ್ ಕುಡ್ತಮುಗೇರು ಕಡೆಯಿಂದ ವಿಟ್ಲ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೊಲೆರೋ ಜೀಪು ಕೊಡಂಗಾಯಿ ಎಂಬಲ್ಲಿ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story