ಮೈತ್ರಿ ಸರಕಾರದ ವಿರುದ್ಧ ಅಪಸ್ವರ ಎತ್ತಬಾರದು: ಸಚಿವ ಡಿ.ಕೆ.ಶಿವಕುಮಾರ್
ಬೆಂಗಳೂರು, ಜು. 22: ‘ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಬಗ್ಗೆ ಯಾರೂ ಅಪಸ್ವರ ಎತ್ತಬಾರದು. ನಮ್ಮ ನಾಯಕರು ಕೆಲವು ಮಿತಿಗಳನ್ನು ಹಾಕಿದ್ದು, ಆ ಮಿತಿಯೊಳಗೆ ಎಲ್ಲರೂ ಕೆಲಸ ಮಾಡಿದರೆ ಮಾತ್ರ ಪಕ್ಷ ಉಳಿಸಲು ಸಾಧ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಹೇಗೆ ಉಳಿಸಿಕೊಳ್ಳಬೇಕು ಎಂದು ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದರು.
‘ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರಕ್ಕೆ ಭವಿಷ್ಯವಿಲ್ಲ’ ಎಂಬ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿಕೆ ಸಲ್ಲ. ಈಗಾಗಲೇ ಉಸ್ತುವಾರಿ ವೇಣುಗೋಪಾಲ್ ಮೈತ್ರಿ ವಿರುದ್ಧ ಬಹಿರಂಗ ಹೇಳಿಕೆ ನೀಡಬೇಡಿ ಎಂದು ಸೂಚನೆ ಕೊಟ್ಟಿದ್ದಾರೆ ಎಂದು ಹೇಳಿದರು.
ಕೆ.ಎನ್.ರಾಜಣ್ಣ ತುಮಕೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ವಿಚಾರ ಸಂಬಂಧ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಉತ್ತರ ನೀಡಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಲಿದ್ದಾರೆ. ಈ ಬಗ್ಗೆ ತಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಣೆ ನೀಡಿದರು.