ಕಾಪು: ಪತ್ರಕರ್ತ ಜಯಂತ್ ಪಡುಬಿದ್ರಿ ಸಂಸ್ಮರಣೆ, ಪ್ರತಿಭಾ ಪುರಸ್ಕಾರ
ಕಾಪು, ಅ. 20: ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾಪು ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಅವರ ಸಂಸ್ಮರಣೆ ಕಾರ್ಯಕ್ರಮ ಶನಿವಾರ ನಡೆಯಿತು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ವೈ.ಎನ್ ಶೆಟ್ಟಿ, ಕಾರ್ಯನಿರತ ಪತ್ರಕರ್ತರು ತಮ್ಮ ವೃತ್ತಿ ಪರತೆಯ ಜತೆಗೆ ಸಾಮಾಜಿಕ ಜವಾಬ್ದಾರಿ ಯೊಂದಿಗೆ ಕೆಲಸ ಮಾಡಬೇಕಾದ ಅನಿವಾರ್ಯತೆಯಿದೆ. ಜಯಂತ್ ಪಡುಬಿದ್ರೆ ವಿವಿಧ ಪತ್ರಿಕೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಪ್ರಬುದ್ಧ ಬರವಣಿಗೆ, ಅನ್ವೇಷಣಾ ಪ್ರವೃತ್ತಿ, ಸಾಮಾಜಿಕ ಚಿಂತನೆ, ನೈಪುಣ್ಯತೆ ಮಾಧ್ಯಮ ವಲಯದಲ್ಲಿ ಉತ್ತಮ ಹೆಸರು ತಂದುಕೊಟ್ಟಿದೆ. ಪತ್ರಿಕೋದ್ಯಮ ಕ್ಷೇತ್ರಕ್ಕೆ ಕಾಲಿಡುವ ಹೊಸಬರನ್ನು ಆಕರ್ಷಿಸಲು ಮುಂದಿನ ದಿನಗಳಲ್ಲಿ ಜಯಂತ್ ಪಡುಬಿದ್ರಿ ಅವರ ಹೆಸರಿನಲ್ಲಿ ಮಾಧ್ಯಮ ಕಾರ್ಯಾಗಾರಗಳನ್ನು ನಡೆಸಲು ಸೂಚಿಸಿದರು.
ಗ್ರಾಮೀಣ ಪತ್ರಿಕೋದ್ಯಮ ವಿದ್ಯಾರ್ಥಿನಿ ಕುಮಾರಿ ದೀಕ್ಷಾ ಪಣಿಯೂರು ಅವರಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಇದೇ ಸಂದರ್ಭ ಜಯಂತ್ ಪಡುಬಿದ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಇತ್ತೀಚೆಗೆ ನಿಧನರಾದ ಛಾಯಾಗ್ರಾಹಕ ಕಾಪು ಲಕ್ಷ್ಮಣ್ ಸುವರ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಕಾಶ ಸುವರ್ಣ ಕಟಪಾಡಿ ಅಧ್ಯಕ್ಷತೆ ವಹಿಸಿದ್ದರು.
ಉಡುಪಿಯ ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ಉಪನ್ಯಾಸಕ ಮಂಜಪ್ಪ ಡಿ.ಗೋಣಿ, ಕಿಶನ್ ರಾಜ್ ಪಡುಬಿದ್ರಿ ಮುಖ್ಯ ಅತಿಥಿಗಳಾಗಿದ್ದರು. ಕೋಶಾಧಿಕಾರಿ ಸಂತೋಷ್ ಕಾಪು, ಬಿ.ಪುಂಡಲೀಕ ಮರಾಠೆ ಉಪಸ್ಥಿತರಿದ್ದರು. ಹರೀಶ್ ಹೆಜ್ಮಾಡಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಕರುಣಾಕರ ನಾಯಕ್ ವಂದಿಸಿದರು.