ಅಮೃತಸರ ರೈಲ್ವೆ ದುರಂತ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಖರ್ಗೆ ಒತ್ತಾಯ
ಕಲಬುರಗಿ, ಅ.20: ಪಂಜಾಬಿನ ಅಮೃತಸರದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರೈಲ್ವೆ ದುರಂತಕ್ಕೆ ರೈಲ್ವೆ ಇಲಾಖೆಯೆ ನೇರ ಹೊಣೆಯಾಗಿದ್ದು, ಈ ಸಂಬಂಧ ತನಿಖಾ ತಂಡ ರಚಿಸಿ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈಲ್ವೆ ಹಳಿಯ ಸಮೀಪ ರಾವಣನ ಪ್ರತಿಕೃತಿ ನಿಲ್ಲಿಸಿ ಬೆಂಕಿ ಹಚ್ಚಲು ಅವಕಾಶ ಕಲ್ಪಿಸಿದ್ದು ಸರಿಯಲ್ಲ ಎನ್ನುವ ಮೂಲಕ ರೈಲ್ವೆ ಇಲಾಖೆಯ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ರೈಲ್ವೆ ಹಳಿ ಪಕ್ಷ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸುವಾಗ ರೈಲ್ವೆ ಇಲಾಖೆಯು ಎಚ್ಚರಿಕೆ ವಹಿಸಬೇಕಿತ್ತು. ಆದರೆ, ಅಲ್ಲಿ ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೆ ಕಾರ್ಯಕ್ರಮ ನಡೆಸಲು ಅವಕಾಶ ಕಲ್ಪಿಸಿದ ರೈಲ್ವೆ ಇಲಾಖೆ ಹಾಗೂ ರೈಲ್ವೆ ಪೊಲೀಸರ ಕ್ರಮ ಸರಿಯಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ರೈಲ್ವೆ ಹಳಿ ಬಳಿ ಸಾರ್ವಜನಿಕ ಕಾರ್ಯಕ್ರಮ ನಡೆಸಲು ಅನುಮತಿ ನೀಡಿದವರು ಯಾರು? ಅವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಇಂತಹ ದುರಂತಗಳು ಸಂಭವಿಸದಂತೆ ರೈಲ್ವೆ ಇಲಾಖೆ ಸೂಕ್ತ ಗಮನ ಹರಿಸಬೇಕು ಎಂದು ಅವರು ಆಗ್ರಹಿಸಿದರು.