ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ವಿರೋಧಿಸಿ ಪ್ರತಿಭಟನೆ
ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಕಾಸರಗೋಡು ಸಂಸದ ಭರವಸೆ
ಮಂಗಳೂರು, ಡಿ.10: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಆರು ವಿಮಾನ ನಿಲ್ದಾಣಗಳನ್ನು ಖಾಸಗೀಕರಣ ಮಾಡುವ ಕೇಂದ್ರ ಸರಕಾರದ ನಿರ್ಧಾರ ವಿರೋಧಿಸಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣದ ಉದ್ಯೋಗಿಗಳು ಮೂರು ದಿನದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಎಎಇಯು ಸಂಘಟನೆ ನೇತೃತ್ವದಲ್ಲಿ ಮಂಗಳೂರು ವಿಮಾನ ನಿಲ್ದಾಣದ ಉದ್ಯೋಗಿಗಳು ಸೋಮವಾರದಿಂದ ಮೂರು ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕೇರಳ ರಾಜ್ಯದ ಕಾಸರಗೋಡು ಸಂಸದ ಕರುಣಾಕರನ್ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ‘ಮುಂದಿನ ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಲಾಗುವುದು’ ಎಂದು ಭರವಸೆ ನೀಡಿದರು.
ಈ ಕುರಿತು ‘ವಾರ್ತಾಭಾರತಿ’ಗೆ ಪ್ರತಿಕ್ರಿಯಿಸಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ವಿ.ವಿ.ರಾವ್, ವಿಮಾನ ನಿಲ್ದಾಣದ ಉದ್ಯೋಗಿಗಳು ಕೇಂದ್ರ ಸರಕಾರದ ನಿರ್ಧಾರ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವುದು ನಿಜ. ಈ ಪ್ರತಿಭಟನೆಯಿಂದ ವಿಮಾನಗಳ ಹಾರಾಟಕ್ಕೆ ಯಾವುದೇ ಅಡಚಣೆ ಉಂಟಾಗಿಲ್ಲ ಎಂದು ತಿಳಿಸಿದರು.