ಸಂಸತ್ ಕಾರ್ಯಕ್ರಮದಲ್ಲಿ ಮುಖಾಮುಖಿಯಾದರೂ ಮಾತನಾಡದ ಪ್ರಧಾನಿ ಮೋದಿ-ರಾಹುಲ್ ಗಾಂಧಿ
ಹೊಸದಿಲ್ಲಿ, ಡಿ.13: ಕಾಂಗ್ರೆಸ್ ಪಕ್ಷ ದೇಶದ ಮೂರು ರಾಜ್ಯಗಳಾದ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ಗಢದಲ್ಲಿ ಬಿಜೆಪಿಯಿಂದ ಅಧಿಕಾರ ಕಿತ್ತುಕೊಂಡ ಎರಡು ದಿನಗಳ ಬಳಿಕ ಗುರುವಾರ ಸಂಸತ್ತಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮುಖಾಮುಖಿಯಾಗಿದ್ದರೂ ಮಾತನಾಡದೇ ವೌನಕ್ಕೆ ಶರಣಾಗಿದ್ದರು.
2001ರಲ್ಲಿ ಸಂಸತ್ತಿನ ಮೇಲೆ ನಡೆದ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ಸಲ್ಲಿಕೆಯ ಕಾರ್ಯಕ್ರಮದಲ್ಲಿ ಈ ಇಬ್ಬರು ನಾಯಕರು ಹತ್ತಿರವೇ ನಿಂತುಕೊಂಡಿದ್ದರು. ಇವರಿಬ್ಬರ ಮಧ್ಯೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಂತಿದ್ದರು.
ಮೋದಿ ಅವರು ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಮನಮೋಹನ್ ಸಿಂಗ್ರೊಂದಿಗೆ ಮಾತನಾಡಿದರು.
ಕೇಂದ್ರ ಸಚಿವರಾದ ವಿಜಯ್ ಗೊಯೆಲ್ ಹಾಗೂ ರಾಮದಾಸ್ ಅಠವಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೈಕುಲುಕುತ್ತಿದ್ದ ದೃಶ್ಯ ಕಂಡುಬಂದಿತು.
ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಹಾಗೂ ಯಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಸಹಿತ ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.