ಸಂತಶ್ರೇಷ್ಠ ಕನಕದಾಸರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿದೆ: ಸಂಸದ ಮುದ್ದಹನುಮೇಗೌಡ
ಕನಕದಾಸರ 531ನೇ ಜನ್ಮ ದಿನಾಚರಣೆ
ತುಮಕೂರು,ಡಿ.15: ಸಂತ ಶ್ರೇಷ್ಠ ಕನಕದಾಸರ ಕೀರ್ತನೆಗಳಲ್ಲಿರುವ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಸಂಸದರಾದ ಎಸ್.ಪಿ. ಮುದ್ದಹನುಮೇಗೌಡ ಕರೆ ನೀಡಿದ್ದಾರೆ.
ತುಮಕೂರು ನಗರದ ಬಾಲಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಸಂತಶ್ರೇಷ್ಠ ಕನಕದಾಸರ 531ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಕನಕದಾಸರು ಜೀವಿಸಿದ್ದ ಕಾಲದಲ್ಲಿ ಸಮಾಜದಲ್ಲಿದ್ದ ಜಾತಿ ಸಂಘರ್ಷವನ್ನು ತೊಡೆದು ಹಾಕಲು ತಮ್ಮ ಕೀರ್ತನೆಗಳ ಮೂಲಕ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿದರು. ಇಂತಹ ಸಂತಶ್ರೇಷ್ಠ ಕನಕದಾಸರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ರಾಜ್ಯಸರಕಾರವು ಬಾಡ ಗ್ರಾಮವನ್ನು ಅಭಿವೃದ್ಧಿಪಡಿಸಲು ಹಾಗೂ ಕನಕದಾಸರ ಕೀರ್ತನೆಗಳನ್ನು ದೇಶ-ವಿದೇಶಗಳಲ್ಲಿ ಪ್ರಚುರಪಡಿಸುವ ಉದ್ದೇಶದಿಂದ ಕಾಗಿನೆಲೆ ಅಭಿವೃದ್ದಿ ಪ್ರಾಧಿಕಾರವನ್ನು ರಚಿಸಿ, ಆ ಮೂಲಕ ಹಲವಾರು ಕ್ರಾಂತಿಕಾರಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಅವರು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಅವರು, ದಾಸ ಸಾಹಿತ್ಯವನ್ನು ಶ್ರೀಮಂತಗೊಳಿಸಿದವರು ಕನಕದಾಸರು. ಇವರ ಕೀರ್ತನೆಯಲ್ಲಿರುವ ಸಂದೇಶವು ಇಂದಿಗೂ ಪ್ರಸ್ತುತವಾಗಿದೆ. ಜಾತಿಯತೆ ಎಂಬುದು ದಿನೇದಿನೇ ಹೆಚ್ಚಾಗುತ್ತಿರುವ ಇಂದಿನ ದಿನಗಳಲ್ಲಿ ಕನಕದಾಸರ ಸಂದೇಶವನ್ನು ಮೈಗೂಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಸಮಾರಂಭದಲ್ಲಿ ಕುರುಬ ಸಮಾಜದ ಅಭಿವೃದ್ದಿಗೆ ಶ್ರಮಿಸಿದ 10 ಮಂದಿಗೆ ಜಿಲ್ಲಾ ಕನಕ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಕೆ., ಜಿಲ್ಲಾ ಪಂ. ಸಿಇಓ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾಗೋಪಿನಾಥ್, ಮಾಜಿ ವಿಧಾನ ಪರಿಷತ್ ಶಾಸಕರಾದ ಡಾ.ಹುಲಿನಾಯ್ಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಆಪಿನಕಟ್ಟೆ, ಕಲಾವಿದ ಡಾ. ಲಕ್ಷ್ಮಣ್ದಾಸ್ ಮತ್ತಿತರರು ಹಾಜರಿದ್ದರು.