ಜ.11ರಿಂದ ಮೂರು ದಿನಗಳ ಕೊಡಗು ಪ್ರವಾಸಿ ಉತ್ಸವ
ಮಡಿಕೇರಿ, ಡಿ.15 : ಜಿಲ್ಲಾಡಳಿತ ವತಿಯಿಂದ ಜನವರಿ 11 ರಿಂದ ಮೂರು ದಿನಗಳ ಕಾಲ ಪ್ರವಾಸಿ ಉತ್ಸವ 2019 ಆಯೋಜಿಸುವ ಬಗ್ಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪ್ರವಾಸಿ ಉತ್ಸವವನ್ನು ಆಯೋಜಿಸುವ ಸಂಬಂಧ ಚರ್ಚಿಸಲಾಯಿತು. ಈ ಮೂರು ದಿನದ ಒಂದು ದಿನ ಓಪನ್ ಸ್ಟ್ರೀಟ್ ಫೆಸ್ಟಿವಲ್ ಆಯೋಜಿಸುವ ಬಗ್ಗೆ ಚರ್ಚೆ ನಡೆಯಿತು. ಆಹಾರ ಮೇಳ, ಸಭಾ ಕಾರ್ಯಕ್ರಮ, ಮಳಿಗೆ ನಿರ್ಮಾಣ ಮತ್ತಿತರ ಬಗ್ಗೆ ಅಂದಾಜು ಪಟ್ಟಿ ತಯಾರಿಸಿ, ವರದಿ ನೀಡುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು. ಕಾರ್ಯಕ್ರಮ ಆಯೋಜನೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಅಂತಿಮ ರೂಪುರೇಷೆ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಹೇಳಿದರು.
ಇದೇ ಸಂದರ್ಭದಲ್ಲಿ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಟ ಪ್ರದರ್ಶನ ಏರ್ಪಡಿಸುವಂತೆ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಫಲಪುಷ್ಪ ಪ್ರದರ್ಶನವನ್ನು ಆಕರ್ಷಣೀಯವಾಗಿ ಏರ್ಪಡಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಹೊಟೇಲ್ ಅಸೋಷಿಯೇಶನ್ ಅಧ್ಯಕ್ಷ ನಾಗೇಂದ್ರ ಪ್ರಸಾದ್, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಬಿ.ಎನ್.ಪ್ರಕಾಶ್, ಹೋಂಸ್ಟೇ ಅಸೋಸಿಯೇಶನ್ ಅಧ್ಯಕ್ಷರಾದ ಚಂಗಪ್ಪ, ಟ್ರಾವೆಲ್ ಕೂರ್ಗ್ ಅಧ್ಯಕ್ಷರಾದ ಸತ್ಯ ಅವರು ಪ್ರವಾಸಿ ಉತ್ಸವ ಆಯೋಜನೆ ಬಗ್ಗೆ ಹಲವು ಮಾಹಿತಿ ನೀಡಿದರು.
ಜಿ.ಪಂ.ಸಿಇಒ ಲಕ್ಷ್ಮಿಪ್ರಿಯಾ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ್, ಹಿರಿಯ ಸಹಾಯಕ ನಿರ್ದೇಶಕರಾದ ದೇವಕಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಜಗನ್ನಾಥ್, ಲೋಕೋಪಯೋಗಿ ಇಲಾಖೆಯ ಇಇ ಇಬ್ರಾಹಿಂ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ರಾಜು, ಪೌರಾಯುಕ್ತರಾದ ರಮೇಶ್, ನಗರ ಪೋಲೀಸ್ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ, ಪಶುಪಾಲನೆ ಇಲಾಖೆಯ ಡಿಡಿ ತಮ್ಮಯ್ಯ ಇತರರು ಹಾಜರಿದ್ದರು.