ನಿಗಮ-ಮಂಡಳಿಗಳ ನೇಮಕಾತಿಗೆ ಜೆಡಿಎಸ್ ಸಿದ್ಧತೆ
ಬೆಂಗಳೂರು, ಫೆ.15: ಬಜೆಟ್ ಅಧಿವೇಶನ ಮುಕ್ತಾಯಗೊಳ್ಳುತ್ತಿದ್ದಂತೆ ನಿಗಮ-ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರ ಹುದ್ದೆಗಳಿಗೆ ಪಕ್ಷದ ಕಾರ್ಯಕರ್ತರನ್ನು ನೇಮಕ ಮಾಡುವ ಸಂಬಂಧ ಜೆಡಿಎಸ್ ಸಿದ್ಧತೆಗಳನ್ನು ಆರಂಭಿಸಿದೆ.
ಈ ತಿಂಗಳ ಒಳಗಾಗಿ ತನ್ನ ಪಾಲಿನ ನಿಗಮ, ಮಂಡಳಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರನ್ನು ನೇಮಿಸಲು ಜೆಡಿಎಸ್ ಉದ್ದೇಶಿಸಿದೆ. ಆಪರೇಷನ್ ಕಮಲದ ಕಾರ್ಮೋಡ ಸರಿದು, ಬಜೆಟ್ ಅಧಿವೇಶನ ಮುಕ್ತಾಯಗೊಂಡಿರುವುದರಿಂದ ನಿರಾತಂಕವಾಗಿರುವ ಜೆಡಿಎಸ್ ವರಿಷ್ಠರು, ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿಗಮ, ಮಂಡಳಿಗಳ ನೇಮಕಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸಲು ನಿರ್ಧರಿಸಿದ್ದಾರೆ.
ಕಾಂಗ್ರೆಸ್ ಪಾಲಿನ ನಿಗಮ, ಮಂಡಳಿಗೆ ಈಗಾಗಲೇ ನೇಮಕಾತಿ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ಬಹುಷಃ ಮಾರ್ಚ್ ಮೊದಲ ವಾರದಲ್ಲಿ ಲೋಕಸಭಾ ಚುನಾವಣೆಯ ಅಧಿಸೂಚನೆ ಹೊರಬೀಳುವ ಸಾಧ್ಯತೆಗಳಿರುವುದರಿಂದ, ನೀತಿ ಸಂಹಿತೆ ಜಾರಿಗೆ ಬರುವ ಮುನ್ನವೇ ಈ ಮಾಸಾಂತ್ಯಕ್ಕೆ ನಿಗಮ-ಮಂಡಳಿಗಳ ನೇಮಕಾತಿ ಪೂರ್ಣಗೊಳಿಸಬೇಕೆಂಬುದು ಪಕ್ಷದ ನಾಯಕರ ಲೆಕ್ಕಾಚಾರವಾಗಿದೆ.
ಒಂದು ವೇಳೆ ಈ ತಿಂಗಳ ಒಳಗಾಗಿ ನಿಗಮ, ಮಂಡಳಿಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ, ಲೋಕಸಭಾ ಚುನಾವಣೆ ಮುಗಿಯುವವರೆಗೂ ಆಕಾಂಕ್ಷಿಗಳು ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು ಎನ್ನಲಾಗಿದೆ.