ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ದುರ್ಬಲ: ಬಿಜೆಪಿ ನಾಯಕ ಶ್ರೀನಿವಾಸಪ್ರಸಾದ್
ಬಿಜೆಪಿ ಕಾರ್ಯಕರ್ತರ ಸಭೆ
ಹನೂರು, ಮಾ.24: ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ದುರ್ಬಲವಾಗಿದೆ ಎಂದು ಚಾಮರಾಜನಗರ ಲೋಕಸಭಾ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.
ಹನೂರು ತಾಲೂಕಿನ ರಾಮಾಪುರದ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವಿರೋಧ ಪಕ್ಷವಾಗಿ ಹೊರ ಹೊಮ್ಮಲು ಸಾಧ್ಯವಾಗದಷ್ಟು ಹೀನಾಯ ಸೋಲು ಕಂಡಿತು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸೀಟುಗಳನ್ನು ಗೆಲ್ಲುವ ಮುಖಾಂತರ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆಯಾದ ನಂತರ ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ಮಹತ್ತರವಾದ ಬದಲಾವಣೆಯಾಗಲಿದ್ದು, ಕರ್ನಾಟಕದಲ್ಲಿ ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಗಳಾಗುತ್ತಾರೆ. ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಒಳಗೊಳಗೆ ಕತ್ತಿ ಮಸೆಯುತ್ತಿದ್ದಾರೆ ಎಂದು ದೂರಿದರು.
ಬಿಜೆಪಿ ಮುಖಂಡ ವಿಜಯೇಂದ್ರ ಮಾತನಾಡಿದರು. ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಧ್ಯಕ್ಷ ಪ್ರೊ.ಮಲ್ಲಿಕಾರ್ಜುನ್, ನಂಜನಗೂಡು ಶಾಸಕ ಹರ್ಷವರ್ಧನ್, ಕೋಟೆ ಶಿವಣ್ಣ, ಮಾಜಿ ಶಾಸಕ ಭಾರತಿ ಶಂಕರ್, ಮಾಜಿ ಶಾಸಕಿ ಪರಿಮಳ ನಾಗಪ್ಪ, ಬಿಜೆಪಿ ಮುಖಂಡ ಡಾ.ಪ್ರೀತನ್ ನಾಗಪ್ಪ, ಕೆ.ಕೆ ನಟರಾಜು, ಜಿಪಂ ಸದಸ್ಯೆ ಮಂಜುಳಾ ರಂಗಸ್ವಾಮಿ, ದತ್ತೇಶ್ ಕುಮಾರ್, ವೆಂಕಟೇಗೌಡ, ರಾಷ್ಟ್ರೀಯ ಪರಿಷತ್ ಸದಸ್ಯ ವೆಂಕಟಸ್ವಾಮಿ, ರಘು ಕೌಟಿಲ್ಯ ಮೊದಲಾದವರು ಉಪಸ್ಥಿತರಿದ್ದರು.