ಎ.21 ರಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಿಂಧನೂರಿಗೆ
ಚಂದ್ರಬಾಬು ನಾಯ್ಡು
ರಾಯಚೂರು, ಎ.17: ಸಿಂಧನೂರು ನಗರಕ್ಕೆ ಎ.21ರಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದ್ದಾರೆ.
ಸಿಂಧನೂರು ನಗರದ ಖಾಸಗಿ ಕಾಕತೀಯ ಕ್ಲಬ್ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಎ.21ರಂದು ಕೊಪ್ಪಳ ಜಿಲ್ಲೆಯ ಶ್ರೀರಾಮನಗರಕ್ಕೆ ಬೆಳಗ್ಗೆ ಆಗಮಿಸಲಿದ್ದು, ಮಧ್ಯಾಹ್ನ ಸಿಂಧನೂರಿಗೆ ಬರಲಿದ್ದಾರೆ. ಮೈತ್ರಿ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಪರವಾಗಿ ನಡೆಯಲಿರುವ ಬಹಿರಂಗ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಸೇರಿ ಇತರ ನಾಯಕರು ಭಾಗವಹಿಸಲಿದ್ದಾರೆ ಎಂದರು.
ಸಚಿವ ವೆಂಕಟರಾವ್ ನಾಡಗೌಡ ಮಾತನಾಡಿ, ಮೊಟ್ಟ ಮೊದಲ ಬಾರಿಗೆ ಸಿಂಧನೂರಿಗೆ ಆಗಮಿಸುವ ಸಿಎಂಗೆ ಅದ್ದೂರಿ ಸ್ವಾಗತ ನೀಡಲಾಗುವುದು. ಸಿಎಂ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸುವ ನಿರೀಕ್ಷೆ ಇದೆ. ಮೈತ್ರಿ ಪಕ್ಷಗಳ ಕಾರ್ಯಕರ್ತರು ಭಾಗವಹಿಸಬೇಕು ಎಂದರು.
ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಕೆಪಿಸಿಸಿ ಕಾರ್ಯದರ್ಶಿ ಕೆ.ಕರಿಯಪ್ಪ, ಸತ್ಯನಾರಾಯಣ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಖಾಜಿ ಮಲ್ಲಿಕ್ ವಕೀಲ, ಬಿ.ಹರ್ಷಾ, ಸುಬ್ಬಾರಾವ್, ಶ್ರೀನಿವಾಸ ಚಿಟ್ಟೂರಿ, ಜಿ.ಸತ್ಯನಾರಾಯಣ, ನಾಗೇಶ ಹಂಚಿನಾಳ ಕ್ಯಾಂಪ್ ಉಪಸ್ಥಿತರಿದ್ದರು.