ರಾಷ್ಟ್ರೀಯ ಟಿವಿ ಚಾನೆಲ್ ಗಳು ತಲೆ ಹಿಡುಕರು: ಮಮತಾ ಬ್ಯಾನರ್ಜಿ ವಾಗ್ದಾಳಿ
ಕೊಲ್ಕತಾ: ಅಮಿತ್ ಶಾ ರೋಡ್ ಶೋ ನಂತರ ಕೊಲ್ಕತಾದಲ್ಲಿ ಹಿಂಸೆ ಭುಗಿಲೆದ್ದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೊರಗಿನಿಂದ ಕೊಲ್ಕತಾಕ್ಕೆ ರೌಡಿಗಳನ್ನು ಕರೆ ತಂದಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಮತ್ತು ಸರಕಾರಿ ಆಸ್ತಿ ಗಳಿಗೆ ಹಾನಿಯುಂಟು ಮಾಡಿದ್ದಾರೆ ಜೊತೆಗೆ ಬಂಗಾಳಿ ತತ್ವಜ್ಞಾನಿ ಈಶ್ವರ್ ಚಂದ್ರ ವಿದ್ಯಾಸಾಗರ್ ಅವರ ಪ್ರತಿಮೆಗೆ ಹಾನಿ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಇಲ್ಲಿನ ಬೆಹಾಲದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಬ್ಯಾನರ್ಜಿ ಅವರು ಶಾ ಉತ್ತರ ಪ್ರದೇಶ, ಬಿಹಾರ ಮತ್ತು ಜರ್ಖಂಡ್ ನಿಂದ ಕೊಲ್ಕತಾಗೆ ಜನರನ್ನು ಕರೆತಂದಿದ್ದರು ಇದನ್ನು ಬಂಗಾಳಿ ಸುದ್ದಿ ವಾಹಿನಿಗಳು ವರದಿ ಮಾಡಿದ್ದವು ಆದರೆ ರಾಷ್ಟ್ರೀಯ ಸುದ್ದಿ ವಾಹಿನಿಗಳು ಇದನ್ನು ಪ್ರಸಾರ ಮಾಡಿಲ್ಲ ಯಾಕೆಂದರೆ ಅವರು ಸರಕಾರದ ಗುಲಾಮರಾಗಿದ್ದಾರೆ ಮತ್ತು ರಾಷ್ಟ್ರೀಯ ಟಿವಿ ಚಾನೆಲ್ ಗಳು ತಲೆ ಹಿಡುಕರು ಎಂದು ಬ್ಯಾನರ್ಜಿ ಕಿಡಿಕಾರಿದ್ದಾರೆ.
ಹಿಂಸಾಚಾರದಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡುವುದಿಲ್ಲ, ನಾವು ಬಿಜೆಪಿಗೆ ಸೂಕ್ತ ಉತ್ತರ ನೀಡಲಿದ್ದೇವೆ ಎಂದು ಬ್ಯಾನರ್ಜಿ ಎಚ್ಚರಿಸಿದ್ದಾರೆ.