ಸಿದ್ದರಾಮಯ್ಯ ಹೆಸರು ಹೇಳುವ ಯೋಗ್ಯತೆ ಶೋಭಾಗೆ ಇಲ್ಲ: ಯು.ಟಿ.ಖಾದರ್
ಹುಬ್ಬಳ್ಳಿ, ಮೇ 16: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಹೇಳಲು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಗೆ ಯೋಗ್ಯತೆಯಿಲ್ಲ ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತಿರುಗೇಟು ನೀಡಿದ್ದಾರೆ.
ಗುರುವಾರ ನಗರದ ಖಾಸಗಿ ಹೊಟೇಲ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅನಗತ್ಯ ಹೇಳಿಕೆಗಳನ್ನು ನೀಡುವ ಮೂಲಕ, ನಮ್ಮ ಪಕ್ಷದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಬೇಡ ಎಂದರು.
ಬಿಜೆಪಿಯವರು ಎಷ್ಟೇ ಪ್ರಯತ್ನಗಳನ್ನು ಪಟ್ಟರೂ, ನಮ್ಮ ಮೈತ್ರಿಯನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಉಭಯ ಪಕ್ಷಗಳ ವರಿಷ್ಠರ ಆಶೀರ್ವಾದದಿಂದ ರಚನೆಯಾಗಿರುವ ಈ ಸಮ್ಮಿಶ್ರ ಸರಕಾರ ಸುಭದ್ರವಾಗಿದ್ದು, ತನ್ನ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ನಡೆಯುತ್ತಿರುವ ಚರ್ಚೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಈ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ಇಲ್ಲಿ ನಾವು ಉಪ ಚುನಾವಣೆಗೆ ಬಂದಿದ್ದು, ಎರಡು ಪಕ್ಷಗಳ ಮುಖಂಡರು ಒಗ್ಗಟ್ಟಿನಿಂದ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತಿದ್ದೇವೆ ಎಂದು ಖಾದರ್ ಹೇಳಿದರು.