ಜೂ.29 ರೊಳಗೆ ಸಮಗ್ರ ವರದಿ ಸಲ್ಲಿಸಲು ಸಾರಿಗೆ ಇಲಾಖೆಗೆ ಹೈಕೋರ್ಟ್ ನಿರ್ದೇಶನ
ಸರಕು ವಾಹನಗಳಲ್ಲಿ ಜನರನ್ನು ಸಾಗಿಸುವುದನ್ನು ನಿಷೇಧಿಸಲು ಕೋರಿ ಅರ್ಜಿ
ಬೆಂಗಳೂರು, ಎ.22: ಗೂಡ್ಸ್ ಗಾಡಿ, ಲಾರಿಗಳಲ್ಲಿ ಕಾರ್ಮಿಕರು ಹಾಗೂ ಮಕ್ಕಳನ್ನು ಕರೆದೊಯ್ಯುವ ವಾಹನಗಳನ್ನು ನಿಷೇಧಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ರಾಜ್ಯ ಸಾರಿಗೆ ಇಲಾಖೆ ಸಲ್ಲಿಸಿದ ವರದಿಯನ್ನು ತಿರಸ್ಕರಿಸಿದ ಹೈಕೋರ್ಟ್, ಜೂ.29ರೊಳಗೆ ಸಮಗ್ರ ವರದಿಯನ್ನು ಸಲ್ಲಿಸಲು ನಿರ್ದೇಶಿಸಿದೆ.
ಈ ಕುರಿತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ(ಕೆಎಸ್ ಎಲ್ ಎಸ್ಎ) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಈ ವೇಳೆ ರಾಜ್ಯ ಸಾರಿಗೆ ಇಲಾಖೆಯು ಸರಕು ವಾಹನಗಳಲ್ಲಿ ಕರೆದೊಯ್ಯುವ ವಾಹನಗಳ ವಿರುದ್ಧ ದೂರುಗಳನ್ನು ದಾಖಲಿಸಿಕೊಂಡಿರುವ ಹಾಗೂ ಕ್ರಮಗಳನ್ನು ಕೈಗೊಂಡಿರುವ ಕುರಿತ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿತು. ಇದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ನ್ಯಾಯಪೀಠವು, ಮುಂದಿನ ವಿಚಾರಣೆ ವೇಳೆಗೆ ಸಮಗ್ರ ವರದಿ ಸಲ್ಲಿಸಲು ನಿರ್ದೇಶನ ನೀಡಿತು. ಅರ್ಜಿದಾರರ ಪರವಾಗಿ ವಕೀಲ ಕ್ಲಿಫ್ಟ್ನ್ ಡಿ. ರೊಝರಿಯೊ ಅವರು ವಾದಿಸಿದರು.
ಪ್ರಕರಣವೇನು: ಸರಕು ಸಾಗಣೆ ವಾಹನಗಳಲ್ಲಿ ಶಾಲಾ ಮಕ್ಕಳು ಹಾಗೂ ಜನರನ್ನು ಕಾನೂನನ್ನು ಉಲ್ಲಂಘಿಸಿ ಕರೆದೊಯ್ಯುತ್ತಾರೆ. ಇದರಿಂದ ಅಪಘಾತಗಳು ಸಂಭವಿಸಿ ಸಾವು ಹಾಗೂ ಗಂಭೀರ ಗಾಯಗಳಾಗಿರುವ ಉದಾಹರಣೆಗಳಿವೆ. ಹೀಗಾಗಿ, ಇಂತಹ ಸರಕು ವಾಹನಗಳನ್ನು ನಿಷೇಧಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ