ಕಾಂಗ್ರೆಸ್ ಪಕ್ಷದಿಂದ ಶಾಸಕ ರೋಷನ್ ಬೇಗ್ ಅಮಾನತು
ಬೆಂಗಳೂರು, ಜೂ.18: ರಾಜ್ಯ ಕಾಂಗ್ರೆಸ್ ನಾಯಕತ್ವ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ವಿರುದ್ಧ ಗುರುತರವಾದ ಆಪಾದನೆಗಳನ್ನು ಮಾಡಿರುವ ಆರೋಪದ ಮೇಲೆ ಶಾಸಕ ಆರ್.ರೋಷನ್ ಬೇಗ್ರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ. ಘೋರ್ಪಡೆ ಆದೇಶಿಸಿದ್ದಾರೆ.
ಶಿವಾಜಿನಗರ ಶಾಸಕ ರೋಷನ್ ಬೇಗ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಐಸಿಸಿಗೆ ಶಿಫಾರಸ್ಸು ಮಾಡಲಾಗಿದ್ದು, ಅವರ ಶಿಫಾರಸ್ಸಿಗೆ ಸ್ಪಂದಿಸಿದ ಹೈಕಮಾಂಡ್, ತಕ್ಷಣದಿಂದಲೇ ಜಾರಿಗೆ ಬರುವಂತೆ ಬೇಗ್ರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಸಚಿವ ಸ್ಥಾನವನ್ನು ಹಣಕ್ಕಾಗಿ ಮಾರಾಟ ಮಾಡಲಾಗಿದೆ ಎಂದು ರೋಷನ್ ಬೇಗ್ ಕೀಳಾಗಿ ಮಾತನಾಡಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬಗ್ಗೆಯೂ ಕೆಟ್ಟದಾಗಿ ಮಾತನಾಡಿದ್ದರು. ಹಾಗಾಗಿ ರೋಷನ್ ಬೇಗ್ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಿ ಎಂದು ಎಐಸಿಸಿಗೆ ಶಿಫಾರಸ್ಸು ಮಾಡಲಾಗಿತ್ತು. ಪಕ್ಷವಿರೋಧಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ರೋಷನ್ ಬೇಗ್ರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.