ಐಎಂಎ ವಂಚನೆ ಪ್ರಕರಣ: ಮನ್ಸೂರ್ ಖಾನ್ ವಿರುದ್ಧ ಮತ್ತೊಂದು ಪ್ರಕರಣ ದಾಖಲು
ಬೆಂಗಳೂರು, ಜೂ.19: ಈಗಾಗಲೇ ವಂಚನೆ ಆರೋಪ ಎದುರಿಸುತ್ತಿರುವ ಐಎಂಎ ಮಾಲಕ ಮನ್ಸೂರ್ ಖಾನ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಚಿನ್ನದ ವ್ಯಾಪಾರಿ ಅಂಕಿತ್ ಸಾಂಘ್ವಿ ಎಂಬವರು ಮನ್ಸೂರ್ ಖಾನ್ ವಿರುದ್ಧ ವಂಚನೆ ಆರೋಪ ಮಾಡಿದ್ದು, ಈ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸಾರ್ವಜನಿಕರಿಂದ ಮಾತ್ರವಲ್ಲದೆ, ಚಿನ್ನಾಭರಣ ತಯಾರಿಕೆ ವ್ಯಾಪಾರಿಗಳಿಗೂ ಇದೇ ರೀತಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಮನ್ಸೂರ್ ಖಾನ್ ನನ್ನ ಬಳಿ ಸುಮಾರು 9.80 ಕೋಟಿ ರೂ. ಮೌಲ್ಯದ ಚಿನ್ನವನ್ನು ಖರೀದಿಸಿ, ಚೆಕ್ವೊಂದನ್ನು ನೀಡಿದ್ದರು. ಆದರೆ, ಹಣ ಡ್ರಾ ಮಾಡಿಕೊಳ್ಳುವ ಹಿಂದಿನ ದಿನವೇ ಮನ್ಸೂರ್ ಖಾನ್ ಕುಟುಂಬ ಸಮೇತ ತಲೆಮರೆಸಿಕೊಂಡಿದ್ದಾರೆ ಎಂದು ಅಂಕಿತ್ ಸಾಂಘ್ವಿ ದೂರಿದ್ದಾರೆ.
ಈ ಸಂಬಂಧ ಕರ್ಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮೂಲಕ ಇಲ್ಲಿವರೆಗೂ ಒಟ್ಟು 6 ಎಫ್ಐಆರ್ಗಳು ಮನ್ಸೂರ್ ಖಾನ್ ವಿರುದ್ಧ ದಾಖಲಾಗಿವೆ.
Next Story