ನ್ಯಾಯಾಧೀಶರ ಫಲಿತಾಂಶ ಪ್ರಕಟಿಸಲು ಹೈಕೋರ್ಟ್ ಆದೇಶ
ಬೆಂಗಳೂರು, ಜು.10: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿವಿಲ್ ನ್ಯಾಯಾಧೀಶರಾಗಿದ್ದ ಎಸ್.ಎಂ.ಶಿವಬೀರಯ್ಯ ಅವರ ಜಿಲ್ಲಾ ನ್ಯಾಯಾಧೀಶ ಹುದ್ದೆಯ ಫಲಿತಾಂಶ ಪ್ರಕಟಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತು ಎಸ್.ಎಂ.ಶಿವಬೀರಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮುರ್ತಿ ಪಿ.ಬಿ.ಭಜಂತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಸಿವಿಲ್ ನ್ಯಾಯಾಧೀಶರಾಗಿದ್ದಾಗ ಸೇವೆ ಸಮಾಧಾನಕರವಾಗಿಲ್ಲ ಎಂದು ಎಸ್.ಎಂ.ಶಿವಬೀರಯ್ಯ ಅವರನ್ನು ನ್ಯಾಯಾಧೀಶ ಹುದ್ದೆಯಿಂದ ಬಿಡುಗಡೆ ಮಾಡಲಾಗಿತ್ತು. ಈ ನಡುವೆ 2015ರ ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಹಾಕಿದ್ದಾಗ ಅವರ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ಇದನ್ನು ಪ್ರಶ್ನಿಸಿ ಶಿವಬೀರಯ್ಯ ಕೋರ್ಟ್ಗೆ ಹೋಗಿದ್ದರು. ಪರೀಕ್ಷೆ ಬರೆಯಲು ಕೋರ್ಟ್ ಅನುಮತಿ ಕೊಟ್ಟಿತ್ತು. ಆದರೆ, ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಮತ್ತು ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠವು ಫಲಿತಾಂಶ ತಡೆಗೆ ಆದೇಶಿಸಿತ್ತು.
ಫಲಿತಾಂಶ ಪ್ರಕಟಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡುವಂತೆ ಶಿವಬೀರಯ್ಯ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಪೀಠ ಈ ಅರ್ಜಿಯನ್ನು ಪುರಸ್ಕರಿಸಿ, ಫಲಿತಾಂಶ ಪ್ರಕಟಿಸಲು ಆದೇಶಿಸಿದೆ.