ಕಾಂಗ್ರೆಸ್ ನಲ್ಲೇ ಇರುತ್ತೇನೆ, ಸದನಕ್ಕೆ ಹಾಜರಾಗುತ್ತೇನೆ: ರಾಮಲಿಂಗಾರೆಡ್ಡಿ
ಬೆಂಗಳೂರು, ಜು.17: ‘ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ. ನಾಳೆ (ಜು.18) ವಿಧಾನ ಮಂಡಲ ಸದನಕ್ಕೆ ಹಾಜರಾಗುತ್ತೇನೆ’ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ನ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಕೆಲ ಕಾರಣಗಳಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಹಿಂಪಡೆಯುವುದು ಅಥವಾ ಪಡೆಯದಿರುವ ಬಗ್ಗೆ ಸ್ಪೀಕರ್ ರಮೇಶ್ಕುಮಾರ್ ಕರೆದಿರುವ ವಿಚಾರಣೆ ವೇಳೆ ಸ್ಪಷ್ಟವಾಗಿ ನನ್ನ ಅಭಿಪ್ರಾಯ ಹೇಳುತ್ತೇನೆ ಎಂದರು.
ನಾನು ರಾಜಕಾರಣವನ್ನು ಬಹಿರಂಗವಾಗಿ ಚರ್ಚಿಸುವುದಿಲ್ಲ ಎಂದು ಈಗಾಗಲೇ ತಿಳಿಸಿದ್ದೇನೆ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಕಾಂಗ್ರೆಸ್ ಪಕ್ಷದ ಬಗ್ಗೆಯಾಗಲಿ, ಮೈತ್ರಿ ಸರಕಾರದ ವಿರುದ್ಧವಾಗಲಿ ವ್ಯತಿರಿಕ್ತ ಹೇಳಿಕೆ ನೀಡಿಲ್ಲ ಎಂದು ರಾಮಲಿಂಗಾರೆಡ್ಡಿ ಹೇಳಿದರು.
Next Story