ಪ್ರಧಾನಿ ನರೇಂದ್ರ ಮೋದಿಗೆ ಹೈಕೋರ್ಟ್ ನೋಟಿಸ್
ಅಲಹಾಬಾದ್, ಜು. 19: ವಾರಣಾಸಿ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಅಲಹಾಬಾದ್ ಉಚ್ಚ ನ್ಯಾಯಾಲಯ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಗೆ ನೋಟಿಸು ಜಾರಿ ಮಾಡಿದೆ.
ನ್ಯಾಯಮೂರ್ತಿ ಎಂ.ಕೆ. ಗುಪ್ತಾ ಈ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 21ಕ್ಕೆ ನಿಗದಿ ಮಾಡಿದೆ. ವಾರಣಾಸಿಯಿಂದ ಎಸ್ಪಿ ಅಭ್ಯರ್ಥಿಯಾಗಿ ಘೋಷಿತರಾಗಿದ್ದ, ಆದರೆ, ಚುನಾವಣಾಧಿಕಾರಿ ನಾಮಪತ್ರವನ್ನು ತಿರಸ್ಕರಿಸಿರುವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ವಿಫಲರಾದ ಬಿಎಸ್ಎಫ್ ಯೋಧ ಬಹದೂರ್ ಯಾದವ್ ಈ ದೂರು ಸಲ್ಲಿಸಿದ್ದರು. ಭ್ರಷ್ಟಾಚಾರ ಅಥವಾ ನಂಬಿಕೆ ದ್ರೋಹದ ಕಾರಣಕ್ಕೆ ಬಿಎಸ್ಎಫ್ನಿಂದ ವಜಾಗೊಂಡಿಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸಲು ವಿಫಲವಾದ ಹಿನ್ನೆಲೆಯಲ್ಲಿ ಯಾದವ್ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕರಿಸಿದ್ದರು. ಯಾದವ್ ದೂರಿನಲ್ಲಿ, ತನ್ನ ನಾಮಪತ್ರವನ್ನು ತಪ್ಪಾಗಿ ತಿರಸ್ಕರಿಸಲಾಗಿದೆ ಎಂದು ಆರೋಪಿಸಿದ್ದಾರೆ ಹಾಗೂ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಆಯ್ಕೆಯಾಗಿರುವುದನ್ನು ಅಸಿಂಧು ಎಂದು ಘೋಷಿಸುವಂತೆ ಮನವಿ ಮಾಡಿದ್ದಾರೆ.