ಶಿವಮೊಗ್ಗ ಮನಪಾ ವ್ಯಾಪ್ತಿಯಲ್ಲಿ ಪರಿಹಾರ ಕಾರ್ಯಕ್ಕೆ ತುರ್ತು 50 ಕೋ.ರೂ. ಬಿಡುಗಡೆ: ಸಿಎಂ
ಶಿವಮೊಗ್ಗ, ಆ.13: ಪ್ರವಾಹದಿಂದ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾನಿಗೀಡಾದ ರಸ್ತೆ, ಸೇತುವೆ, ಆಸ್ತಪಾಸ್ತಿಗಳ ಮರು ನಿರ್ಮಾಣಕ್ಕಾಗ್ಕಿ ತುರ್ತು 50 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಹ ಪೀಡಿತಕ್ಕೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಸ್ಥಿತಿಯ ಅವಲೋಕನ ಮಾಡುವುದಕ್ಕಾಗಿ ಇಂದು ಬೆಳಗ್ಗೆ ಆಗಮಿಸಿರುವ ಮುಖ್ಯಮಂತ್ರಿ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕಿನಲ್ಲಿರುವ ಪರಿಹಾರ ಕೇಂದ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಶಿವಮೊಗ್ಗ ನಗರದಲ್ಲಿ ಪ್ರವಾಹದಿಂದ ಹಾನಿಗೊಳಗಾದ 5 ಸಾವಿರ ಕುಟುಂಬಗಳಿಗೆ ಅಗತ್ಯ ಸಾಮಗ್ರಿಗಳ ಖರೀದಿಗಾಗಿ ತಲಾ 10ಸಾವಿರ ರೂ. ಪರಿಹಾರ ನೀಡಲಾಗುವುದು. ಭಾಗಶಃ ಹಾನಿಗೀಡಾದ ಮನೆಗಳ ದುರಸ್ತಿಗೆ ತಕ್ಷಣ 1 ಲಕ್ಷ ರೂ., ಸಂಪೂರ್ಣ ಕುಸಿದಿರುವ ಮನೆಗಳ ನಿರ್ಮಾಣಕ್ಕೆ ತಲಾ 5 ಲಕ್ಷ ರೂ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಕೊಳಗೇರಿ ವ್ಯಾಪ್ತಿಯಲ್ಲಿ ಸಂತ್ರಸ್ತರಿಗೆ ಬಹುಮಹಡಿ ಮನೆಗಳ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಲು ಸೂಚನೆ ನೀಡಿದ ಮುಖ್ಯಮಂತ್ರಿ, ನಗರದಲ್ಲಿ ತಡೆಗೋಡೆ ನಿರ್ಮಾಣ ಸೇರಿದಂತೆ ನೆರೆ ಹಾವಳಿ ತಪ್ಪಿಸಲು ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದರು.
ರಾಜ್ಯದಲ್ಲಿ ಪ್ರವಾಹದಿಂದ ಸಂತ್ರಸ್ತರಾಗಿರುವ ಸುಮಾರು 40 ಸಾವಿರ ಕುಟುಂಬಗಳ ಪುವರ್ವಸತಿಗೆ ಸರಕಾರ ಬದ್ಧ ಎಂದು ಮುಖ್ಯಮಂತ್ರಿ ಈ ಸಂದರ್ಭ ನುಡಿದರು.
ಈ ಸಂದರ್ಭ ಕೆ.ಎಸ್.ಈಶ್ವರಪ್ಪ ಮತ್ತಿತರರು ಜೊತೆಗಿದ್ದರು.