ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ದಾಳಿ: ಮೂವರ ಬಂಧನ, ಓರ್ವ ಮಹಿಳೆಯ ರಕ್ಷಣೆ
ಮೈಸೂರು,ಆ.18: ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಮನೆಯೊಂದರ ಮೇಲೆ ದಾಳಿ ನಡೆಸಿ ಮೂವರನ್ನು ಬಂಧಿಸಿ, ಓರ್ವ ಮಹಿಳೆಯನ್ನು ರಕ್ಷಿಸಿದ್ದಾರೆ.
ಬಂಧಿತರನ್ನು ಚಿಕ್ಕಮಗಳೂರು ಜಿಲ್ಲೆ ನಿಲುವಾಗಿಲು ಗ್ರಾಮದ ರಘುನಂದ(35), ಹಾಸನ ಜಿಲ್ಲೆಯ ಹಿರಿಸಾವೆ ಗ್ರಾಮದ ಪ್ರದೀಪ್ (29), ಉಡುಪಿ ಜಿಲ್ಲೆಯ ಹೆಣಗುಡ್ಡದ ನಿವಾಸಿ ಶ್ವೇತಾ (30) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಮಹಿಳೆಯನ್ನು ರಕ್ಷಿಸಲಾಗಿದೆ. ಬಂಧಿತರಿಮದ 14,070 ರೂ. ನಗದು, ನಾಲ್ಕು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಗರದ ಗೋಕುಲಂ 3ನೇ ಹಂತ, 13 ನೇ ಕ್ರಾಸ್ನಲ್ಲಿರುವ ಮನೆಯೊಂದರಲ್ಲಿ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಮಹಿಳೆಯರನ್ನು ಕರೆದುಕೊಂಡು ಬಂದು ಅವರಿಗೆ ಹಣದ ಆಮಿಷವೊಡ್ಡಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದರು ಎಂದು ಹೇಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ. ಈ ಸಂಬಂಧ ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ವಿರುದ್ಧ ಈ ಮೊದಲು ಲಷ್ಕರ್ ಹಾಗೂ ವಿಜಯನಗರ ಪೊಲೀಸ್ ಠಾಣೆಗಳಲ್ಲಿ ಇದೇ ವಿಚಾರವಾಗಿ ಐಟಿಪಿ ಕಾಯ್ದೆ ಅನ್ವಯ ಪ್ರಕರಣಗಳು ದಾಖಲಾಗಿವೆ. ಆದರೂ ಸಹ ಜಾಮೀನಿನ ಮೇಲೆ ಹೊರ ಬಂದು ಮತ್ತೆ ಇದೇ ಚಾಳಿಯನ್ನು ಮುಂದುವರೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.