ನೆರೆ ಸಂತ್ರಸ್ತರ ಪರಿಹಾರ ಹಣ ಹೆಚ್ಚಳ ಮಾಡಲು ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ
ಮೈಸೂರು, ಅ.7: ನೆರೆ ಸಂತ್ರಸ್ತರ ಪರಿಹಾರ ಹಣ ಹೆಚ್ಚಳ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಅ.8ರ ಮಂಗಳವಾರ ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸಲು ಸೋಮವಾರ ಮೈಸೂರಿಗೆ ಆಗಮಿಸಿದ ಅವರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನೆರೆ ಸಂತ್ರಸ್ತರಿಗೆ ಈಗಾಗಲೇ ಮನೆ ಕಟ್ಟಿಕೊಳ್ಳಲು 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದು, ಫೌಂಡೇಶನ್ ಗೆ 1 ಲಕ್ಷ ರೂ. ನಂತರ ಉಳಿಕೆ ಹಣ ನೀಡಲಾಗುವುದು. ಪರಿಹಾರ ಹೆಚ್ಚಳ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ನೆರೆ ಪರಿಸ್ಥಿತಿಗೆ ನಮ್ಮ ಸರಕಾರ ಸ್ಪಂದಿಸಿದ ರೀತಿ ಯಾವ ಸರಕಾರವೂ ಸ್ಪಂದಿಸಿಲ್ಲ, ಅಧಿವೇಶನದಲ್ಲಿ ವಿರೋಧ ಪಕ್ಷಗಳ ಟೀಕೆಗೆ ನೆರೆ ಪರಿಸ್ಥಿತಿ ವಿಷಯ ಬಿಟ್ಟರೆ ಬೇರೇನೂ ಇಲ್ಲ ಎಂದು ಹೇಳಿದರು.
ಈಗಾಗಲೆ ಕೇಂದ್ರ ಸರಕಾರ ಮೊದಲ ಕಂತಿನಲ್ಲಿ ಹಣ ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಹಣ ಬಿಡುಗಡೆ ಮಾಡಲಿದೆ ಎಂದು ಹೇಳಿದರು.
ಇದಕ್ಕೂ ಮೊದಲು ನಾಡಿನ ಜನತೆಗೆ ಆಯುಧ ಪೂಜಾ ಮತ್ತು ವಿಜಯದಶಮಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.