ಜೀವನದಲ್ಲಿ ಒಮ್ಮೆಯಾದರೂ ರಕ್ತದಾನ ಮಾಡಿ: ಜಿ.ಜಗದೀಶ್
ಉಡುಪಿ, ಅ.9: ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ. ರಕ್ತದಾನಕ್ಕೆ ಸರಿಸಾಟಿ ಯಾದ ದಾನ ಯಾವೂದೂ ಇಲ್ಲ. ಒಂದು ಯುನಿಟ್ ರಕ್ತದಾನದ ಮೂಲಕ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು. ಹೀಗಾಗಿ ಜೀವನದಲ್ಲಿ ಒಮ್ಮೆಯಾದರೂ ರಕ್ತದಾನ ಮಾಡಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.
ಬುಧವಾರ ಜಿಲ್ಲಾಡಳಿತ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ, ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರ ಮತ್ತು ಚಿಟ್ಪಾಡಿ ಸೈಂಟ್ ಮೇರಿಸ್ ಖಾಸಗಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ‘ಜೀವಿತಾವಧಿಯಲ್ಲಿ ಒಮ್ಮೆಯಾದರೂ ರಕ್ತದಾನ ಮಾಡಿ’ ಎಂಬ ಘೋಷ ವಾಕ್ಯದಡಿಯಲ್ಲಿ ‘ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ-2019’ರ ಪ್ರಯುಕ್ತ ಚಿಟ್ಪಾಡಿಯ ಸೈಂಟ್ ಮೇರಿಸ್ ಖಾಸಗಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆದ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಯುವಕರು ಪ್ರತೀ ಮೂರು ತಿಂಗಳಿಗೊಮ್ಮೆ ಹಾಗೂ ಯುವತಿಯರು ಪ್ರತಿ ಆರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದ್ದು, ಪ್ರತಿಯೊಬ್ಬರೂ ತಮ್ಮ ಜೀವಿತಾವಧಿಯಲ್ಲಿ ಕನಿಷ್ಠ 240 ಬಾರಿ ರಕ್ತದಾನ ಮಾಡಬಹುದಾಗಿದೆ. ಇದರಿಂದ ಕನಿಷ್ಠ 720 ಜೀವಗಳನ್ನು ಉಳಿಸಲು ಸಾಧ್ಯವಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶೋಕ್ ಹೆಚ್ ಮಾತನಾಡಿ, ರಕ್ತದಾನದಲ್ಲಿ ಉಡುಪಿ ಜಿಲ್ಲೆ ರಾಜ್ಯ ದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಎಲ್ಲಾ ಜಿಲ್ಲೆಗಳಿಗೆ ಮಾದರಿಯಾಗಿದೆ. ಗ್ರಾಮ ಮಟ್ಟದಲ್ಲಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಿ, ವಿದ್ಯಾರ್ಥಿ ಹಾಗೂ ಯುವ ಜನತೆಯಲ್ಲಿ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನವನ್ನು ಮಾಡಿ ಜೀವ ಉಳಿಸುವ ಕಾರ್ಯದಲ್ಲಿ ತೊಡಗಬೇಕು. ಜಿಲ್ಲೆಯಲ್ಲಿ ಮೂರು ರಕ್ತದಾನ ಕೇಂದ್ರಗಳಿವೆ. ಆದರೂ ಕೆಲವು ಸಂಧರ್ಗಳಲ್ಲಿ ರಕ್ತದ ಕೊರತೆ ಎದುರಾಗುತ್ತಿದ್ದು, ಮುಂದಿನ ದಿನಗಳಲ್ಲಿ ರಕ್ತದ ಕೊರತೆಯನ್ನು ನೀಗುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಸರ್ಜನ್ ಡಾ. ಮಧುಸೂದನ ನಾಯಕ್ ಮಾತನಾಡಿ, ದೇಶ ಎಷ್ಟೇ ಮುಂದುವರಿದಿದ್ದರೂ ರಕ್ತಕ್ಕೆ ಪರ್ಯಾಯ ವಸ್ತು ಇಲ್ಲ. ಅಪಘಾತ ಹಾಗೂ ಇತರ ಆರೋಗ್ಯ ಸಂಬಂಧಿತ ಪ್ರಕರಣಗಳಲ್ಲಿ ವ್ಯಕ್ತಿ ಮೂಲಕ ಮಾತ್ರವೇ ಪಡೆದ ರಕ್ತ ಒಂದು ಜೀವವನ್ನು ಉಳಿಸಬಹುದು. ಯಾವುದೇ ಫಲಾಪೇಕ್ಷೆ ಇಲ್ಲದೇ ಯಾವುದನ್ನೂ ಬಯಸದೇ ಮಾಡುವ ದಾನ ರಕ್ತದಾನವಾಗಿದೆ. ಯುವ ಜನತೆ ಇಂತಹ ಕಾರ್ಯದಲ್ಲಿ ಯಾವುದೇ ಒತ್ತಡವಿಲ್ಲದೇ ಸ್ವಯಂ ಪ್ರೇರಿತರಾಗಿ ಭಾಗಿಯಾಗಬೇಕು ಎಂದರು.
ಸೈಂಟ್ ಮೇರಿಸ್ ವಿದ್ಯಾಸಂಸ್ಥೆಗಳ ಸಂಚಾಲಕ ವಂ.ವಲೇರಿಯನ್ ಮೆಂಡೋನ್ಸಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಕ್ತದಾನಕ್ಕೆ ತುಂಬಾ ಮಹತ್ವವಿದ್ದು, ಯಾವುದೇ ಪ್ರಯೋಗಾಲಯದಲ್ಲಿ ರಕ್ತವನ್ನು ತಯಾರಿಸಲು ಸಾಧ್ಯವಿಲ್ಲ. ರಕ್ತಕ್ಕೆ ಯಾವುದೇ ಜಾತಿ, ಧರ್ಮಗಳ ಬೇಧವಿಲ್ಲ. ಒಬ್ಬ ದಾನಿ ನೀಡುವ ರಕ್ತ ಇನ್ನೊಂದು ಜಿೀವಕ್ಕೆ ಆಧಾರವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ ದಾನಿಗಳಾದ ಸ್ವಪ್ನಾ ಸುರೇಶ್, ವೇಣುಗೋಪಾಲ, ರೇಣು ಜಯರಾಂ, ಗುರುಮೂರ್ತಿ, ಗುರುಪ್ರಸಾದ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸೈಂಟ್ ಮೇರಿಸ್ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಗಿಲ್ಬರ್ಟ್ ಬ್ರಗಾಂರಝಾ ಸ್ವಾಗತಿಸಿದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು ಎಸ್.ವಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಾಪಕ ಮಹಾಬಲೇಶ್ವರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.