ಅ.30ರಿಂದ ಗ್ರಾಮೀಣಾಭಿವೃದ್ಧಿ ಸಂಸ್ಥೆಗಳ ಅಂತರ್ರಾಷ್ಟ್ರೀಯ ಸಮ್ಮೇಳನ
ಬೆಂಗಳೂರು, ಅ.15: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಸಹಯೋಗ ಸಂಸ್ಥೆಗಳ ವತಿಯಿಂದ ಬಡತನ ನಿವಾರಣೆ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ತೊಡಗಿಕೊಂಡಿರುವ ಸಂಸ್ಥೆಗಳ ಜೊತೆಯಲ್ಲಿ ಚರ್ಚೆ ನಡೆಸುವ ಸಂಬಂಧ ಅ.30ರಿಂದ ನ.2ರವರೆಗೆ ಅಂತರ್ರಾಷ್ಟ್ರೀಯ ಸಮ್ಮೇಳನವನ್ನು ದೇವನಹಳ್ಳಿಯ ಕ್ಲಾಕ್ಸ್ ಎಕ್ಸಾಟಿಕಾ ರೆಸಾರ್ಟ್ ಅಂಡ್ ಸ್ಪಾದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.30ರಂದು ನಡೆಯುವ ಅಂತರ್ರಾಷ್ಟ್ರೀಯ ಸಮ್ಮೇಳನವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪವಸ್ತು ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಲಿದ್ದು, ಅಮೆರಿಕಾದ ಚಿಕಾಗೋ ನಗರದ ಪ್ರೊ. ಲ್ಯಾರಿ ರೀಡ್ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದು ನಬಾರ್ಡ್ ಸಂಸ್ಥೆ ಅಧ್ಯಕ್ಷ ಡಾ. ಹರ್ಷಕುಮಾರ್ ಬಾನವಾಲ ಯೋಜನೆಯ ಸಾಧನಾ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಾಳಾಗಿ ಹೇಮಾವತಿ ಹೆಗಡೆ, ಮಹಮ್ಮದ್ ಮುಸ್ತಫಾ, ಟಿ.ಸಿ. ಸುಶೀಲ್ಕುಮಾರ್, ಮೃತ್ಯುಂಜಯ ಮಹಾಪಾತ್ರ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಅ.31 ಮತ್ತು ನ.1ರಂದು ನಡೆಯಲಿರುವ ಸಮ್ಮೇಳನದಲ್ಲಿ ಏಳು ಪ್ರಮುಖ ಚರ್ಚಾಗೋಷ್ಠಿಗಳನ್ನು ಆಯೋಜಿಸಲಾಗಿದೆ. ರಿಸರ್ವ್ ಬ್ಯಾಂಕ್ ಮಾಜಿ ಗವರ್ನರ್ ಡಾ. ಚಕ್ರವರ್ತಿ ರಂಗರಾಜನ್, ಮಾಜಿ ಉಪರಾಜ್ಯಪಾಲ ಡಾ. ಎಚ್.ಆರ್. ಖಾನ್ ಮತ್ತು ಡಾ. ವೀರೇಂದ್ರ ಹೆಗ್ಗಡೆ ಅವರಿಂದ ವಿಶೇಷ ಅಧಿವೇಶನಗಳನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.