ಹನೂರು: ಗುಡ್ಡ ಕುಸಿದ ಪ್ರದೇಶಕ್ಕೆ ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ಭೇಟಿ
ಹನೂರು, ಅ.23: ತಾಲೂಕಿನ ಮಲೈಮಹದೇಶ್ವರ ಬೆಟ್ಟದಿಂದ ನೆರೆಯ ರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಪಾಲಾರ್ ರಸ್ತೆಯಲ್ಲಿ ಗುಡ್ಡ ಕುಸಿದಿರುವ ಹಿನ್ನೆಲೆ ಬುಧವಾರ ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಲೆಮಹದೇಶ್ವರ ಬೆಟ್ಟದಿಂದ ನೆರೆಯ ರಾಜ್ಯ ತಮಿಳುನಾಡಿಗೆ ತೆರಳುವ ರಾಜ್ಯ ಹೆದ್ದಾರಿ 79ರ ಮಾರ್ಗದಲ್ಲಿ ಸೋಮವಾರ ರಾತ್ರಿ ಭೂಕುಸಿತ ಮತ್ತು ಹಲವು ಕಡೆ ಕಲ್ಲುಗಳು ರಸ್ತೆಗೆ ಉರುಳಿತ್ತು. ಇದರಿಂದಾಗಿ ರಸ್ತೆಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯವಸ್ತವಾಗಿತ್ತು.
ಈ ಬಗ್ಗೆ ಮಹದೇಶ್ವರಬೆಟ್ಟ ಅಭಿವೃದ್ದಿ ಪ್ರಾಧಿಕಾರಿದ ಅಧಿಕಾರಿಗಳು, ಲೋಕೋಪಯೋಗಿ ಅಧಿಕಾರಿಗಳು ಮತ್ತು ಮ.ಮ ಬೆಟ್ಟದ ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ ತೆರವು ಕಾರ್ಯಾಚರಣೆ ನಡೆಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು. ಇಂದು ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳ ಬಳಿ ಮಾಹಿತಿ ಪಡೆದರು.
ಈ ವೇಳೆ ಮಾತನಾಡಿದ ಅವರು, ಈ ಸಮಸ್ಯೆಗಳು ಮುಂದೆ ಮರುಕಳಿಸದ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸಂಪೂರ್ಣ ಮುಂಜಾಗೃತಾ ಕ್ರಮ ವಹಿಸಿ, ಸಾರ್ವಜನಿಕರು ನಿರ್ಭೀತಿಯಿಂದ ಸಂಚರಿಸಲು ಅಗತ್ಯ ಕ್ರಮಕೈಗೂಳ್ಳುವಂತೆ ಸ್ಥಳದಲ್ಲಿದ್ದ ಲೋಕಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.