ಕಾಂಗ್ರೆಸ್ ಅವಧಿಯಲ್ಲಿ ಅಭಿವೃದ್ಧಿ ಕಾಣದ ಪಾಲಿಕೆ: ಮೋನಪ್ಪ ಭಂಡಾರಿ
ಮಂಗಳೂರು, ನ.8: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಹಲವು ವರ್ಷಗಳ ಕಾಲ ಆಡಳಿತ ನಡೆಸಿದರೂ ಯಾವುದೇ ಅಭಿವೃದ್ಧಿ ಸಾಧ್ಯವಾಗಿಲ್ಲ. ಕಾಂಗ್ರೆಸ್ನಿಂದ ಬೇಸತ್ತ ಜನತೆ ಈ ಬಾರಿ ಬಿಜೆಪಿಯನ್ನು ಬೆಂಬಲಿಸುವುದು ನಿಶ್ಚಿತ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಹೇಳಿದ್ದಾರೆ.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬಹುಮತ ಪಡೆಯುವುದರೊಂದಿಗೆ ಅಧಿಕಾರಕ್ಕೆ ಬರುವುದು ನಿಶ್ಚಿತ. ನಾಲ್ಕು ವಾರ್ಡ್ಗಳಲ್ಲಿ ಪಕ್ಷ ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಿದೆ ಎಂದರು.
ಮನೆ ಮನೆ ಭೇಟಿಗೆ ಆದ್ಯತೆ ನೀಡಿದ್ದು, ಅಭ್ಯರ್ಥಿಗಳು ಒಂದು ಸುತ್ತು ಮತ್ತು ಕಾರ್ಯಕರ್ತರು ಎರಡು ಸುತ್ತಿನ ಮತಪ್ರಚಾರ ನಡೆಸಿದ್ದಾರೆ. ಮೂರನೇ ಸುತ್ತಿನ ಮನೆ ಭೇಟಿ ನಡೆಯುತ್ತಿದ್ದು, ಮತದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಮುಖರಾದ ಜಿತೇಂದ್ರ ಕೊಟ್ಟಾರಿ, ಭಾಸ್ಕರಚಂದ್ರ ಶೆಟ್ಟಿ, ಪ್ರಭಾ ಮಾಲಿನಿ, ಸಂಜಯ ಪ್ರಭು ಉಪಸ್ಥಿತರಿದ್ದರು.