ಸಿಎಎ ವಿರೋಧಿ ಹೋರಾಟ ಕಾಣಿಸದಂತೆ ಯಾವ ಕೋಟೆ ನಿರ್ಮಿಸುತ್ತೀರಿ: ಪ್ರಧಾನಿಗೆ ಕುಮಾರಸ್ವಾಮಿ ಪ್ರಶ್ನೆ
ಬೆಂಗಳೂರು, ಫೆ. 18: ‘ದೇಶವ್ಯಾಪಿ ಭುಗಿಲೆದ್ದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟ ಕಾಣಿಸದಂತೆ ಯಾವ ಭದ್ರಕೋಟೆ ನಿರ್ಮಿಸುತ್ತೀರಿ?’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ದೇಶದಲ್ಲಿ ತಾಂಡವವಾಡುತ್ತಿರುವ ಬಡತನ, ನಿರುದ್ಯೋಗ ಸಮಸ್ಯೆ ಮರೆಮಾಚಲು ಯಾವ ತಡೆಗೋಡೆ ನಿರ್ಮಿಸುತ್ತೀರಿ? ಪ್ರಧಾನಿ ಮೋದಿ ಅವರೇ ಉತ್ತರಿಸುವಿರಾ? ಎಂದು ಇಂದಿಲ್ಲಿ ಖಾರವಾಗಿ ಪ್ರಶ್ನೆ ಮಾಡಿದ್ದಾರೆ.
‘ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತದ ಭೇಟಿ ವೇಳೆ ಅಹ್ಮದಾಬಾದ್ನ ಸ್ಲಂಗಳು ಕಾಣದಂತೆ ಪ್ರಧಾನಿ ಮೋದಿ ಅವರು ಎತ್ತರದ ಗೋಡೆಗಳನ್ನು ಕಟ್ಟಿಸುತ್ತಿದ್ದಾರಂತೆ! ಆದರೆ, ಅಧಃಪತನಕ್ಕೆ ಕುಸಿದಿರುವ ದೇಶದ ಆರ್ಥಿಕತೆ ಕಾಣಿಸದಂತೆ ಮೋದಿ ಅವರು ಯಾವ ಗೋಡೆ ಕಟ್ಟುತ್ತಾರೆ?’ ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ದೇಶವ್ಯಾಪಿ ಭುಗಿಲೆದ್ದಿರುವ ಸಿಎಎ ವಿರೋಧಿ ಹೋರಾಟ ಕಾಣಿಸದಂತೆ ಯಾವ ಭದ್ರಕೋಟೆ ನಿರ್ಮಿಸುತ್ತಾರೆ? ದೇಶದಲ್ಲಿ ತಾಂಡವವಾಡುತ್ತಿರುವ ಬಡತನ, ನಿರುದ್ಯೋಗ ಸಮಸ್ಯೆ ಮರೆಮಾಚಲು ಯಾವ ತಡೆಗೋಡೆ ನಿರ್ಮಿಸುತ್ತಾರೆ? ಮೋದಿ ಅವರೇ ಉತ್ತರಿಸುವಿರಾ?
— H D Kumaraswamy (@hd_kumaraswamy) February 18, 2020
2/2