ಫೆ. 29-ಮಾ.1: ಪೆಟ್ರೋಲಿಯಂ ವರ್ತಕರ ‘ತೈಲ ಸಮಾಗಮ’
ಉಡುಪಿ, ಫೆ.25: ಕರ್ನಾಟಕ ರಾಜ್ಯ ಪೆಟ್ರೋಲಿಯಂ ವರ್ತಕರ ಮಹಾ ಮಂಡಳದ ಆಶ್ರಯದಲ್ಲಿ ತೈಲ ಸಮಾಗಮ-2020ನ್ನು ಫೆ.29 ಮತ್ತು ಮಾ.1 ರಂದು ಉಡುಪಿ ಕರಾವಳಿ ಬೈಪಾಸ್ ಬಳಿಯ ಲಿಗಾಡೋ ಹೊಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಫೆ.29ರಂದು ಮಧ್ಯಾಹ್ನ 2:30ಕ್ಕೆ ಸಂಸ್ಥೆಯ ವಾರ್ಷಿಕ ಮಹಾಸಭೆಯನ್ನು ಏರ್ಪಡಿಸಲಾಗಿದೆ. ಸಂಜೆ 5ಗಂಟೆಗೆ ಸಮಾಗಮವನ್ನು ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಗೋಪಾಲಯ್ಯ ಉದ್ಘಾಟಿಸಲಿರುವರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿ ಭಟ್, ವೇದವ್ಯಾಸ ಕಾಮತ್, ಯು.ಟಿ.ಖಾದರ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭಾಗ ವಹಿಸಲಿರುವರು ಎಂದು ಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಮಂಜಪ್ಪ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.
ಮಾ.1ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೆ.ಜಯಪ್ರಕಾಶ್ ಹೆಗ್ಡೆ, ಶಾಸಕರಾದ ಸುನೀಲ್ ಕುಮಾರ್, ಸುಕುಮಾರ್ ಶೆಟ್ಟಿ, ಐವನ್ ಡಿಸೋಜ ಭಾಗವಹಿಸಲಿರುವರು. ಕಾರ್ಯಕ್ರಮದಲ್ಲಿ ಪೆಟ್ರೋಲಿಯಂ ವರ್ತಕರಿಗೆ ಉಪಯುಕ್ತವಾಗುವ ಹಲವು ವಿಷಯಗಳ ಕುರಿತು ವಿಚಾರಗೋಷ್ಠಿಗಳು ನಡೆಯಲಿವೆ. ಸುಮಾರು 600- 700 ಮಂದಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಆನಂದ ಕಾರ್ನಾಡ್, ಉಪಾಧ್ಯಕ್ಷ ವಿಶ್ವಾಸ್ ಶೆಣೈ ಉಪಸ್ಥಿತರಿದ್ದರು.