ಕೊರೋನ ಭೀತಿ: ವಿವಿಗಳಲ್ಲಿ ಜಾಗೃತಿ ಮೂಡಿಸಲು ಉನ್ನತ ಶಿಕ್ಷಣ ಇಲಾಖೆ ಸೂಚನೆ
ಬೆಂಗಳೂರು, ಮಾ.22: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನ ಸೋಂಕನ್ನು ಪರಿಣಾಮಕಾರಿಯಾಗಿ ತಡೆಯುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಿರಿಯ ವಿದ್ಯಾರ್ಥಿಗಳ ಜೊತೆಗೂಡಿ ಕೊರೋನ ಸೋಂಕಿನ ವಿರುದ್ಧ ಜಾಗೃತಿ ಮೂಡಿಸಬೇಕೆಂದು ಉನ್ನತ ಶಿಕ್ಷಣ ಇಲಾಖೆ ಸೂಚಿಸಿದೆ.
ಕೊರೋನ ಸೋಂಕನ್ನು ತಡೆಗಟ್ಟುವ ಕುರಿತು ಸಮನ್ವಯ ಸಾಧಿಸಲು ಶಿಕ್ಷಣ ಇಲಾಖೆ, ವಿಶ್ವವಿದ್ಯಾಲಯ, ಸಂಸ್ಥೆಗಳ ಮಟ್ಟದಲ್ಲಿ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಹಾಗೂ ಅವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಇ-ಮೇಲ್ ಐಡಿಯನ್ನು ರಾಜ್ಯ ಮಟ್ಟದ ನೋಡಲ್ ಅಧಿಕಾರಿಗಳಿಗೆ ಕಳುಹಿಸತಕ್ಕದ್ದು.
ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಇಲಾಖೆ, ವಿಶ್ವವಿದ್ಯಾಲಯ, ಸಂಸ್ಥೆಗಳಿಂದ ಕೋವಿದ್-19 ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಹಾಗೂ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಂಡು ಬರುವ ಶಂಕಿತರ ವಿವರಗಳನ್ನು ಕ್ರೋಢೀಕರಿಸಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಇವರಿಗೆ ಸಲ್ಲಿಸಬೇಕು. ವಿಶ್ವವಿದ್ಯಾಲಯಗಳ ವ್ಯಾಪಿಯಲ್ಲಿನ ಅತಿಥಿ ಗೃಹ, ಕಚೇರಿ, ಶಾಲೆಗಳು, ಕಾಲೇಜುಗಳಲ್ಲಿ ಸ್ನಾನದ ಕೋಣೆಗಳೊಂದಿಗೆ ಪ್ರತ್ಯೇಕ ಕೊಠಡಿಗಳಿಂದ ಕಟ್ಟಡಗಳ ವಿವರಗಳನ್ನು ಸಿದ್ದಪಡಿಸಿ ಇಟ್ಟುಕೊಳ್ಳತಕ್ಕದ್ದು ಮತ್ತು ಅತ್ಯಂತ ತುರ್ತು ಸಂದರ್ಭಗಳಲ್ಲಿ ಆ ಕೊಠಡಿಯನ್ನು ತಲುಪಲು ಹಾಗೂ ಅದರ ಬೀಗದ ಕೈಗಳನ್ನು ನೀಡಲು ವ್ಯಕ್ತಿಯನ್ನು ಗುರುತಿಸತಕ್ಕದ್ದೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.