ಕೊರೋನ ಚಿಕಿತ್ಸೆ : ಗರಿಷ್ಠ ಮುನ್ನೆಚ್ಚರಿಕೆ ವಹಿಸಲು ಸಂಸದ ನಳಿನ್ ಸೂಚನೆ
ಮಂಗಳೂರು, ಮಾ.24: ಕೊರೋನ ಶಂಕಿತರಿಗೆ ಹಾಗೂ ದೃಢಪಟ್ಟವರಿಗೆ ಚಿಕಿತ್ಸೆ ನೀಡುವ ಅವಧಿಯಲ್ಲಿ ಗರಿಷ್ಠ ಮುನ್ನೆಚ್ಚರಿಕೆ ವಹಿಸಲು ಸಂಸದೆ ನಳಿನ್ ಕುಮಾರ್ ಕಟೀಲು ಸೂಚಿಸಿದ್ದಾರೆ.
ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೋನ ಶಂಕಿತರು ಹಾಗೂ ದೃಢಪಟ್ಟವರಿಗೆ ಚಿಕಿತ್ಸೆ ನೀಡುವ ನೂತನ ಆಯುಷ್ ಕಟ್ಟಡಕ್ಕೆ ಮಂಗಳವಾರ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.
ಕೊರೋನ ಸಾಂಕ್ರಾಮಿಕ ಕಾಯಿಲೆಯಾಗಿರುವುದರಿಂದ ಇತರ ರೋಗಿಗಳ ಬಗ್ಗೆಯೂ ಗಮನಹರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಬಿದ್ದಲ್ಲಿ ವೆನ್ಲಾಕ್ನಲ್ಲಿರುವ ಇತರೆ ರೋಗಿಗಳನ್ನು ಬೇರೆ ಆಸ್ಪತ್ರೆಗೆ ವರ್ಗಾಯಿಸುವ ಬಗ್ಗೆ ಪರಿಶೀಲಿಸಲು ಸೂಚಿಸಿದ ಅವರು ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲೂ ಅಗತ್ಯ ಚಿಕಿತ್ಸೆ ದೊರಕಿಸಬೇಕು. ಆಯಾ ತಾಲೂಕಿನಲ್ಲಿರುವ ಖಾಸಗಿ ವೈದ್ಯರ ಸೇವೆ ಪಡೆಯಲು ಕ್ರಮ ಕೈಗೊಳ್ಳಬೇಕು ಎಂದರು.
ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೋನ ಚಿಕಿತ್ಸೆಯಲ್ಲಿ ಯಾವುದೇ ಲೋಪಗಳಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಪ್ರತೀದಿನ ವೆನ್ಲಾಕ್ ಅಧೀಕ್ಷಕರು ಆಸ್ಪತ್ರೆಯ ಎಲ್ಲಾ ವಿಭಾಗ ಮುಖ್ಯಸ್ಥರ, ವೈದ್ಯರ ಸಭೆ ನಡೆಸಿ, ಸಮನ್ವಯತೆ ಕಾಪಾಡಿಕೊಳ್ಳಬೇಕು. ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ಒದಗಿಸುವುದು ಸರಕಾರದ ಉದ್ದೇಶವಾಗಿದ್ದು, ಇದರಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳಲಾಗದು ಎಂದು ತಾಕೀತು ಮಾಡಿದರು.
ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮಾತನಾಡಿ ವೆನ್ಲಾಕ್ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಆಯುಷ್ ಕಟ್ಟಡ ಹಾಗೂ ಸೂಪರ್ ಸ್ಪೆಷಾಲಿಟಿ ಬ್ಲಾಕ್ಗಳಲ್ಲಿ ಕೊರೋನ ಪೀಡಿತರ ಹಾಗೂ ಶಂಕಿತರ ಚಿಕಿತ್ಸೆಗಾಗಿಯೇ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಆಯುಷ್ ಕಟ್ಟಡದಲ್ಲಿ ಪ್ರತೀ ರೋಗಿಗೂ ಪ್ರತ್ಯೇಕ 18 ಕೊಠಡಿಗಳನ್ನು ಕಾದಿರಿಸಲಾಗಿದೆ. ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿಯೂ ಪ್ರತ್ಯೇಕವಾಗಿರುವ ಕೊಠಡಿಗಳನ್ನು ಕಾದಿರಿಸಲಾಗಿದೆ. ಶಂಕಿತ ರೋಗಿ ದಾಖಲಾದ ತಕ್ಷಣ, ರೋಗಿಯನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಿ, ಕೌನ್ಸಿಲಿಂಗ್ ಮಾಡಿ, ಗಂಟಲ ದ್ರವ ಮಾದರಿ ಸಂಗ್ರಹಿಸಲಾಗುತ್ತಿದೆ. ಪರೀಕ್ಷೆಯಲ್ಲಿ ನೆಗೆಟಿವ್ ಬಂದರೆ ಸಾಕಷ್ಟು ಮುನ್ನಚ್ಚರಿಕೆ ಮಾಹಿತಿ ನೀಡಿ ಮನೆಯಲ್ಲಿ ನಿಗಾದಲ್ಲಿರಿಸಲು ಕಳುಹಿಸಲಾಗುತ್ತದೆ. ಪಾಸಿಟಿವ್ ಬಂದರೆ ಚಿಕಿತ್ಸೆಯನ್ನು ಅದೇ ಕೊಠಡಿಯಲ್ಲಿ ಮುಂದುವರಿಸಲಾಗುವುದು ಎಂದರು.
ಸಭೆಯಲ್ಲಿ ವೆನ್ಲಾಕ್ ಅಧೀಕ್ಷಕಿ ಡಾ. ರಾಜೇಶ್ವರಿದೇವಿ, ಡಿಸಿಪಿ ಲಕ್ಷ್ಮಿಗಣೇಶ್ ಮತ್ತಿತರರು ಉಪಸ್ಥಿತರಿದ್ದರು.