ದ.ಕ. ಜಿಲ್ಲೆಗೆ ವಿಶೇಷ ನೋಡಲ್ ಅಧಿಕಾರಿಯಾಗಿ ವಿ. ಪೊನ್ನುರಾಜ್
ಮಂಗಳೂರು, ಮಾ. 26: ದ.ಕ. ಜಿಲ್ಲೆಯಲ್ಲಿ ಕೊರೋನ ಸಂಬಂಧಿ ನೋಡಲ್ ಅಧಿಕಾರಿಯಾಗಿ ಕಿಶೋರ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲೆಗೆ ವಿಶೇಷ ನೋಡಲ್ ಅಧಿಕಾರಿಯಾಗಿ ಜಿಲ್ಲೆಯ ವಿಶೇಷ ಕಾರ್ಯದರ್ಶಿಯಾಗಿರುವ ಐಎಎಸ್ ಅಧಿಕಾರಿ ಪೊನ್ನುರಾಜ್ ಅವರ ನೇಮಕ ಮಾಡುವ ಕೋರಿಕೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಮ್ಮತಿಸಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೇಂದ್ರ ಮಾರುಕಟ್ಟೆಯಲ್ಲಿ ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಚಿಲ್ಲರೆ ವ್ಯಾಪಾರಸ್ಥರಿಗೆ ದಿನ ಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಇದೇ ವೇಳೆ ಸಮೀಪದ ಎಲ್ಲಾ ದಿನಸಿ ಅಂಗಡಿಗಳಲ್ಲಿ ಸಾರ್ವಜನಿಕರಿಗೆ ದಿನಬಳಕೆಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 12 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಖರೀದಿಯ ವೇಳೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಅವರು ಹೇಳಿದರು.
ಈಗಾಗಲೇ ವ್ಯಾಪಾರಸ್ಥರು ತಮ್ಮ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಬೇಕು. ವ್ಯಾಪಾರಸ್ಥರು ಶಿಸ್ತುಬದ್ಧ ಯೋಜನೆ ರೂಪಿಸದಿದ್ದರೆ ಅಂಗಡಿಗಳನ್ನು ಬಂದ್ ಮಾಡಿಸಲಾಗುವುದು ಎಂದು ಸಚಿವ ಕೋಟಾ ಖಡಕ್ ಸೂಚನೆ ನೀಡಿದರು.
ದರ ಹೆಚ್ಚಳ, ಕಾಳಸಂತೆ ದೂರು ಬಂದಲ್ಲಿ ಪ್ರಕರಣ ದಾಖಲು !
ಆಹಾರ ಸಾಮಗ್ರಿಗಳ ಸಾಗಾಟ ವಾಹನಕ್ಕೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಈಗಾಗಲೇ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಇದೇ ವೇಳೆ ವ್ಯಾಪಾರಸ್ಥರು ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸಿದರೆ, ದರ ಹೆಚ್ಚಳ ಮಾಡುವುದು ಅಥವಾ ಕಾಳ ಸಂತೆ ದಂಧೆ ಮಾಡುವ ಬಗ್ಗೆ ದೂರು ಬಂದಲ್ಲಿ ಅಂತಹ ವ್ಯಾಪಾರಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಖಡಕ್ ಸೂಚನೆ ನೀಡಿದ್ದಾರೆ.
100 ಹೊಸ ವೆಂಟಿಲೇಟರ್ಗಳ ಅಳವಡಿಕೆ
ವೆನ್ಲಾಕ್ ಆಸ್ಪತ್ರೆಯಲ್ಲಿ 32 ವೆಂಟಿಲೇಟರ್ಗಳಿದ್ದು, ಹೊಸ ಕಟ್ಟಡದಲ್ಲಿ ಇನ್ನೊಂದು ವಾರದಲ್ಲಿ 100 ವೆಂಟಿಲೇಟರ್ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಚಿವ ಶ್ರೀನಿವಾಸ ಪೂಜಾರಿ ತಿಳಿಸಿದರು.