ದ.ಕ. ಜಿಲ್ಲೆ: ತುಂಬೆ ನಿವಾಸಿ ಸಹಿತ ಮೂವರಿಗೆ ಕೊರೋನ ಸೋಂಕು ದೃಢ
ಸಾಂದರ್ಭಿಕ ಚಿತ್ರ
ಮಂಗಳೂರು, ಎ. 4: ದ.ಕ.ಜಿಲ್ಲೆಯಲ್ಲಿ ಶನಿವಾರ ಮತ್ತೆ 3 ಕೊರೋನ ಸೋಂಕು ಪ್ರಕರಣ ದೃಢಗೊಂಡಿದ್ದು, ಇದರೊಂದಿಗೆ ದ.ಕ.ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ 12ಕ್ಕೇರಿದೆ.
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ 43 ವರ್ಷದ ವ್ಯಕ್ತಿಯೊಬ್ಬರು ಮಾ.11ರಂದು ದೆಹಲಿಗೆ ಪ್ರಯಾಣಿಸಿದ್ದು, ಮಾ. 22ರಂದು ವಾಪಸ್ ಆಗಿದ್ದರು. ಎ.2ರಂದು ಅವರ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಎ.4ರಂದು ಕೊರೋನ ಸೋಂಕು ದೃಢಪಟ್ಟಿದೆ. ಇವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿ ಜಿಲ್ಲೆಯ ನಿವಾಸಿಯೊಬ್ಬರು ಮಾ.21ರಂದು ದುಬೈಯಿಂದ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ವೈದ್ಯಕೀಯ ನಿಗಾದಲ್ಲಿರಿಸಲಾಗಿದೆ. ಇವರ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಎ.4ರಂದು ಕೊರೋನ ಸೋಂಕು ದೃಢಪಟ್ಟಿದೆ. ಇವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೊಕ್ಕೊಟ್ಟು ನಿವಾಸಿಯೊಬ್ಬರು ಫೆ. 6ರಂದು ಮುಂಬೈಗೆ ತೆರಳಿದ್ದು, ಅಲ್ಲಿಂದ ದಿಲ್ಲಿಗೆ ಪ್ರಯಾಣಿಸಿದ್ದರು. ದಿಲ್ಲಿಯಿಂದ ಮಾ. 20ರಂದು ಮಂಗಳೂರಿಗೆ ಆಗಮಿಸಿದ್ದರು. ಎ. 2ರಂದು ಅವರ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಎ.4ರಂದು ಕೊರೋನ ಸೋಂಕು ದೃಢಪಟ್ಟಿದೆ. ಇವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.