ಕೂಲಿ ಕಾರ್ಮಿಕರಿಗೆ ಆಹಾರ ಹಂಚುತ್ತಿದ್ದವರಿಗೆ ಮುಸ್ಲಿಮರು ಎಂದು ಹಲ್ಲೆ: ಮೂವರನ್ನು ಬಂಧಿಸಿದ ಪೊಲೀಸರು
ಬೆಂಗಳೂರು, ಎ.7: ಕೂಲಿ ಕಾರ್ಮಿಕರಿಗೆ ದಿನಸಿ ಸಾಮಗ್ರಿ ಹಂಚುತ್ತಿದ್ದ ‘ಸ್ವರಾಜ್ ಅಭಿಯಾನ’ ಕಾರ್ಯಕರ್ತರ ಗುಂಪಿನಲ್ಲಿ ಮುಸ್ಲಿಮರಿದ್ದಾರೆಂದು ಹಲ್ಲೆ ನಡೆಸಿದ ಆರೋಪ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ನಿವಾಸಿಗಳಾದ ಜಗದೀಶ್, ಕಾರ್ತಿಕ್ ಮತ್ತು ರಘು ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ಎನ್ಜಿಒ ಕಾರ್ಯಕರ್ತ ಸೆಯ್ಯದ್ ತಬ್ರೇಝ್ ಹಾಗೂ ಇತರರ ಮೇಲೆ ಹಲ್ಲೆ ನಡೆಸಲಾಗಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಏನಿದು ಘಟನೆ: ಲಾಕ್ಡೌನ್ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ 'ಸ್ವರಾಜ್ ಅಭಿಯಾನ್' ಸಂಸ್ಥೆ ನಗರದ ವಿವಿಧೆಡೆ ನೆಲೆಸಿರುವ ಬಡ ಹಾಗೂ ಕೂಲಿ ಕಾರ್ಮಿಕರಿಗೆ ದಿನಸಿ ಸಾಮಗ್ರಿಗಳನ್ನು ವಿತರಣೆ ಮಾಡಲಾಗಿತ್ತು.
ಎರಡು ದಿನಗಳ ಹಿಂದೆ ಇಲ್ಲಿನ ದಾಸರಹಳ್ಳಿ ವ್ಯಾಪ್ತಿಯಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಣೆ ಮಾಡಲಾಗುತಿತ್ತು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಸಂಘಪರಿವಾರ ಕಾರ್ಯಕರ್ತರು, ಮುಸ್ಲಿಮರು ಆಹಾರ ವಿತರಣೆ ಮಾಡಬಾರದು ಎಂದು ಟೀಕಿಸಿ, ಯುವಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಸ್ವರಾಜ್ ಅಭಿಯಾನದ ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಝರೀನ್ ತಾಜ್ ಆರೋಪಿಸಿದ್ದರು.
ಹಲ್ಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದ ಬೆನ್ನಲ್ಲೇ ಅಮೃತಹಳ್ಳಿ ಠಾಣಾ ಪೊಲೀಸರು, ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಿ, ತನಿಖೆ ಕೈಗೊಂಡಿದ್ದರು.