ದ.ಕ. ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೋನ
ಮಹಾರಾಷ್ಟ್ರ, ದೆಹಲಿಯಿಂದ ಬಂದಿದ್ದ ಸೋಂಕಿತರು
ಮಂಗಳೂರು, ಜೂ.3: ದ.ಕ. ಜಿಲ್ಲೆಯಲ್ಲಿ ಬುಧವಾರ ಬಂದ 34 ಗಂಟಲ ದ್ರವ ಮಾದರಿ ವರದಿಯ ಪೈಕಿ ಎರಡು ಪ್ರಕರಣಗಳು ಪಾಸಿಟಿವ್ ಬಂದಿವೆ. ದೆಹಲಿ ಮತ್ತು ಮಹಾರಾಷ್ಟ್ರದಿಂದ ಬಂದಿದ್ದ ಇಬ್ಬರಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 139ಕ್ಕೇರಿದೆ.
ದೆಹಲಿಯಿಂದ ರೈಲಿನಲ್ಲಿ ಪ್ರಯಾಣಿಸಿದ್ದ 25 ವರ್ಷದ ಯುವಕನನ್ನು ಮೇ 28ರಿಂದ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಜ್ವರದ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಇವರ ಗಂಟಲು ದ್ರವ ಮಾದರಿ ಪರೀಕ್ಷೆಯ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಇವರನ್ನು ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಮಹಾರಾಷ್ಟ್ರದ ಪುಣೆಯಿಂದ ಆಗಮಿಸಿದ್ದ 36 ವರ್ಷದ ವ್ಯಕ್ತಿಯನ್ನು ಕಾರ್ಕಳದಲ್ಲಿ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿ ಕಟೀಲು ಗ್ರಾಮದ ಪಟ್ಟೆಜಾಲುವಿನ ಸ್ವಗೃಹದಲ್ಲಿ ವಾಸವಿದ್ದರು. ಜ್ವರದ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಮುಲ್ಕಿ ಆಸ್ಪತ್ರೆ ಯಲ್ಲಿ ದಾಖಲಿಸಲಾಗಿತ್ತು. ಗಂಟಲು ದ್ರವ ಮಾದರಿ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢವಾದ ಹಿನ್ನೆಲೆಯಲ್ಲಿ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.
ಇನ್ನು 46 ವರದಿಗಳು ಬರುವುದು ಬಾಕಿ ಇದೆ. ಈ ದಿನ ನಾಲ್ವರು ಕೊರೋನ ಮುಕ್ತರಾಗಿ ಮನೆಗೆ ತೆರಳಿದ್ದು, ಒಟ್ಟು 73 ಮಂದಿ ಗುಣಮುಖ ರಾಗಿದ್ದಾರೆ. ಆಸ್ಪತ್ರೆಯಲ್ಲಿ ಇನ್ನು 59 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಏಳು ಮಂದಿ ಮೃತಪಟ್ಟಿದ್ದಾರೆ.