ಆಸ್ಪತ್ರೆಯಲ್ಲಿ ಸಿಗದ ಬೆಡ್: ಶಾಸಕ ಝಮೀರ್ ಅಹ್ಮದ್ ಆಪ್ತ ಸಾವು
ಬೆಂಗಳೂರು, ಜು.10: ರಾಜಧಾನಿ ಬೆಂಗಳೂರಿನಲ್ಲಿ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಸಾವನ್ನಪ್ಪುವವರ ಸಂಖ್ಯೆ ದಿನೇ ದಿನೇ ಏರುತ್ತಿದೆ. ಈ ನಡುವೆ ಇಂದು ಶಾಸಕ ಝಮೀರ್ ಅಹ್ಮದ್ ಅವರ ಆಪ್ತ, ನಗರದ ರಾಯಪುರ ವಾರ್ಡ್ ನ ಕಾಂಗ್ರೆಸ್ ಮುಖಂಡರೊಬ್ಬರು ಬೆಡ್ ಸಿಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರು ನಗರದ ಆಸ್ಪತ್ರೆಯೊಂದಕ್ಕೆ ತೆರಳಿದ್ದಾರೆ. ಅಲ್ಲಿ ಸ್ವಾಬ್ ಅನ್ನು ಪರೀಕ್ಷೆಗೆ ತೆಗೆದುಕೊಂಡ ಆಸ್ಪತ್ರೆಯ ಸಿಬ್ಬಂದಿ, ಬಳಿಕ ಅವರನ್ನು ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ. ಅಲ್ಲಿಂದ ಮತ್ತೊಂದು ಆಸ್ಪತ್ರೆಗೆ ತೆರಳಿದ ಕಾಂಗ್ರೆಸ್ ಮುಖಂಡ, ತೀವ್ರ ನಿಗಾ ಘಟಕ ಸಿಗುವಷ್ಟರಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಗುರುವಾರ ಮೃತ ವ್ಯಕ್ತಿಯ ಸ್ವಾಬ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಅವರಿಗೆ ಉಸಿರಾಟದ ಸಮಸ್ಯೆ ಬಿಟ್ಟು ಬೇರೆ ಯಾವುದೇ ಸಮಸ್ಯೆ ಇರಲಿಲ್ಲ. ಆಸ್ಪತ್ರೆಯಲ್ಲಿ ಕೂಡಲೇ ಚಿಕಿತ್ಸೆಗೆ ಒಳಪಡಿಸಿದ್ದರೆ ಬದುಕುವ ಸಾಧ್ಯತೆ ಹೆಚ್ಚಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.