ಕೊಬ್ಬರಿಗೆ ಪ್ರೋತ್ಸಾಹಧನ: ಡಿಸಿಎಂ ಲಕ್ಷ್ಮಣ ಸವದಿ
ಬೆಂಗಳೂರು, ಆ.6: ರಾಜ್ಯದಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಹೆಚ್ಚಿನ ನೆರವು ಒದಗಿಸಲು ಉಂಡೆ ಕೊಬ್ಬರಿಗೆ ಹೆಚ್ಚಿನ ಪ್ರೋತ್ಸಾಹಧನ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ.
ಈ ಬಗ್ಗೆ ಇಂದು ವಿಧಾನಸೌಧದಲ್ಲಿ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಬೆಲೆ ಸ್ಥಿರೀಕರಣದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಇಂದು ಬೆಳಗ್ಗೆ ನಡೆದ ಸಂಪುಟದ ಉಪಸಮಿತಿ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಗೋಪಾಲಯ್ಯ ಮತ್ತು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಭಾಗವಹಿಸಿದ್ದರು.
ಉಂಡೆ ಕೊಬ್ಬರಿಗೆ ಕ್ವಿಂಟಾಲ್ ಗೆ ರೂ.10,300 ಮೊತ್ತದಷ್ಟು ಬೆಂಬಲ ಬೆಲೆಯನ್ನು ಕೇಂದ್ರ ಸರಕಾರ ಘೋಷಿಸಿತ್ತು. ಆದರೆ ಇನ್ನೂ ಹೆಚ್ಚಿನ ಬೆಂಬಲ ಬೆಲೆ ಸಿಗಬೇಕೆಂಬ ರೈತರ ಬೇಡಿಕೆಗೆ ರಾಜ್ಯ ಸರಕಾರ ಸ್ಪಂದಿಸಿ ಕ್ವಿಂಟಾಲ್ ಗೆ ರೂ.1000 ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರದಿಂದಲೇ ಬರಿಸಲು ಈ ಸಭೆಯಲ್ಲಿ ನಿರ್ಧರಿಸಲಾಯಿತು. ಇದರಿಂದಾಗಿ ರೈತರಿಗೆ ಪ್ರತಿ ಕ್ವಿಂಟಾಲ್ ಗೆ ಒಟ್ಟು ರೂ.11,300 ದೊರೆಯುವಂತಾಗುತ್ತದೆ. ರಾಜ್ಯ ಸರಕಾರಕ್ಕೆ ಇದರಿಂದ ಸುಮಾರು 38 ಕೋಟಿ ರೂಪಾಯಿಗಳಷ್ಟು ಹೆಚ್ಚಿನ ಹೊರೆಯಾದರೂ ಸಹ ರೈತರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಈ ನಿರ್ಧಾರದಿಂದಾಗಿ ಕೊಬ್ಬರಿ ಉತ್ಪಾದಿಸುವ ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಮುಂತಾದ ಜಿಲ್ಲೆಗಳ ರೈತರಿಗೆ ವರದಾನವಾಗುತ್ತದೆ.
ಅವಧಿ ವಿಸ್ತರಣೆ: ರೈತರಿಗೆ ಈ ಸಂಬಂಧ ಅನುಕೂಲ ಕಲ್ಪಿಸಲು ರೈತರಿಂದ ಖರೀದಿ ನೋಂದಣಿ ಅವಧಿಯನ್ನು ಆಗಸ್ಟ್ 25ರವರೆಗೆ ವಿಸ್ತರಿಸಲಾಗಿದೆ ಮತ್ತು ಖರೀದಿಯ ಕಾಲಾವಧಿಯನ್ನು ಸೆಪ್ಟೆಂಬರ್ 10ರವರೆಗೆ ವಿಸ್ತರಿಸಿ ಆದೇಶ ನೀಡಲಾಗಿದೆ. ರಾಜ್ಯ ಸರಕಾರದ ಈ ಕ್ರಮದಿಂದ ರೈತರು ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.