ಮೈಸೂರು ವಿವಿಯ 10 ಎಕರೆ ಜಾಗ ಹಸ್ತಾಂತರ: ಸಚಿವ ಸಿ.ಟಿ.ರವಿ
ಕನ್ನಡ ಶಾಸ್ತ್ರೀಯ ಭಾಷಾ ಅಧ್ಯಯನ ಕೇಂದ್ರ
ಬೆಂಗಳೂರು, ಆ. 7: ಕನ್ನಡ ಭಾಷೆ, ಸಂಸ್ಕೃತಿ, ಇತಿಹಾಸದ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಸದುದ್ದೇಶದಿಂದ ಪ್ರಾರಂಭಿಸಲು ಉದ್ದೇಶಿಸಿರುವ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರವನ್ನು ಸಾಂಸ್ಕೃತಿಕ ನಗರಿ ಮೈಸೂರು ವಿಶ್ವವಿದ್ಯಾನಿಲಯದ ಚಾಮುಂಡಿ ಬೆಟ್ಟ ತಪ್ಪಲಿನ ಕೆಳಭಾಗದ 10 ಎಕರೆ ಜಾಗದಲ್ಲಿ ಸುಸಜ್ಜಿತವಾಗಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ.
ಶುಕ್ರವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೇಲ್ಕಂಡ ತೀರ್ಮಾನ ಕೈಗೊಳ್ಳಲಾಗಿದ್ದು, ಕನ್ನಡ ಭಾಷೆಗೆ ಕೇಂದ್ರ ಸರಕಾರ ಶಾಸ್ತ್ರೀಯ ಸ್ಥಾನಮಾನ ನೀಡಿ ಹಲವು ವರ್ಷಗಳು ಕಳೆದರೂ ಶಾಶ್ವತ ಕನ್ನಡ ಅಧ್ಯಯನ ಕೇಂದ್ರವನ್ನು ಆರಂಭ ಮಾಡದಿರುವುದು ಅತ್ಯಂತ ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.
ಇದೀಗ ಮೈಸೂರು ವಿವಿಗೆ ಸೇರಿದ ಚಾಮುಂಡಿ ಬೆಟ್ಟದ ತಪ್ಪಲಿನ 10 ಎಕರೆ ಜಾಗದಲ್ಲಿ ನೂತನ ಹಾಗೂ ಸುಸಜ್ಜಿತ ಕನ್ನಡ ಅಧ್ಯಯನ ಪ್ರಾರಂಭಿಸಲು ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಮುಂದಿನ ಒಂದು ತಿಂಗೊಳಗೆ ಕನ್ನಡ ಅಧ್ಯಯನ ಕೇಂದ್ರ ಪ್ರಾರಂಭಿಸಲು ಅಗತ್ಯ ಸಿದ್ಧತೆಗಳನ್ನು ಪ್ರಾರಂಭಿಸಬೇಕು. ಜೊತೆಗೆ ಜಾಗ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಸಲ್ಲದ ಕಾರಣಗಳನ್ನು ಮುಂದಿಟ್ಟು ವಿಳಂಬ ನೀತಿ ಅನುಸರಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಹಿಂದು-ಮುಂದು ನೋಡುವುದಿಲ್ಲ ಎಂದು ಸಿ.ಟಿ.ರವಿ ಎಚ್ಚರಿಕೆ ನೀಡಿದರು.
ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರವು ಸಿಐಐಎಲ್ನ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಮೈಸೂರು ವಿವಿಗೆ ಸೇರಿದ 3 ಎಕರೆ ಜಾಗದಲ್ಲಿ ಕನ್ನಡ ಅಧ್ಯಯನ ಕೇಂದ್ರವನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿತ್ತು. ಆದರೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಲೋಕ ಶಿಕ್ಷಣ ಇಲಾಖೆ ನೀಡಿದ ಜಾಗವನ್ನು ರದ್ದುಪಡಿಸಿ ಉನ್ನತ ಶಿಕ್ಷಣ ಇಲಾಖೆಗೆ ಹಿಂತಿರುಗಿಸಿದೆ ಎಂದರು.
ಪ್ರಸ್ತುತ ಈ ಜಾಗವು ಕೌಶಲ್ಯಾಭಿವೃದ್ಧಿ ಇಲಾಖೆಗೆ ನೀಡುವಂತೆ ಮೈಸೂರು ವಿವಿಗೆ ಪತ್ರ ಬರೆದಿರುವ ಕಾರಣ ವಿಳಂಬವಾಗಿದೆ. ಹೀಗಾಗಿ ಅಧ್ಯಯನ ಕೇಂದ್ರಕ್ಕೆ ವಿವಿ ವ್ಯಾಪ್ತಿಗೆ ಸೇರಿದ ಹೊರ ವಲಯದಲ್ಲಿ ಜಾಗ ನೀಡುವಂತೆ ಕೋರಲಾಗಿತ್ತು. ಕನ್ನಡ ಅಧ್ಯಯನ ಕೇಂದ್ರ ಪ್ರಾರಂಭಿಸಲು ವಿವಿಯು ಜಾಗವನ್ನು ಅಧಿಕೃತವಾಗಿ ಹಸ್ತಾಂತರ ಮಾಡಿದ ನಂತರ ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಸಚಿವರನ್ನು ನಿಯೋಗವು ದಿಲ್ಲಿಯಲ್ಲಿ ಭೇಟಿಯಾಗಿ ಕಟ್ಟಡ ನಿರ್ಮಾಣಕ್ಕೆ ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡಲು ಪ್ರಸ್ತಾವನೆ ಸಲ್ಲಿಸಬೇಕೆಂಬ ತೀರ್ಮಾನಕ್ಕೂ ಬರಲಾಗಿದೆ ಎಂದು ತಿಳಿಸಿದರು.
ಕೇಂದ್ರ ಮಾನವ ಸಂಪನ್ಮೂಲ ಸಚಿವರು ಹಾಗೂ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಷಿಯವರನ್ನು ನಿಯೋಗ ಭೇಟಿಯಾಗಿ ಅಧ್ಯಯನ ಕೇಂದ್ರಕ್ಕೆ ಅನುದಾನ ಬಿಡುಗಡೆ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಮಂಜೂರು ಮಾಡುವುದು ಹಾಗೂ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಬೇಕೆಂಬ ನಿರ್ಣಯ ಮಾಡಲಾಯಿತು.
ಈಗಾಗಲೇ ಅಧ್ಯಯನ ಕೇಂದ್ರಕ್ಕೆ ಕೇಂದ್ರ ಸರಕಾರ ಅನುದಾನವನ್ನು ನೀಡುತ್ತಿದ್ದು, ಕೇಂದ್ರ ಮಾನವ ಸಂಪನ್ಮೂಲ ಸಚಿವರು ಸಮಿತಿಯ ಅಧ್ಯಕ್ಷರಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವರು, ಉಪಾಧ್ಯಕ್ಷರಾಗಿ ಹಾಗೂ ಇತರರನ್ನು ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಿಐಐಎಲ್ ಅಧಿಕಾರಿಗಳು ಸಚಿವರಿಗೆ ಮನವರಿಕೆ ಮಾಡಿದರು.
ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರದಲ್ಲಿ ಅತ್ಯಾಧುನಿಕ ಸೌಲಭ್ಯಗಳು, ಆಧುನಿಕ ತಂತ್ರಜ್ಞಾನ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳು ಲಭ್ಯವಿರಬೇಕು. ರಾಜ್ಯ ಸರಕಾರಕ್ಕೆ ಇದಕ್ಕೆ ಸಂಪೂರ್ಣವಾಗಿ ಸಹಕಾರ ನೀಡಲಿದ್ದು, ಹಣಕಾಸಿನ ತೊಂದರೆಯೂ ಇಲ್ಲ. ಎಷ್ಟು ಸಾಧ್ಯವೋ ಅಷ್ಟು ಬೇಗ ಅಧ್ಯಯನ ಕೇಂದ್ರ ಆರಂಭವಾಗುವಂತೆ ಪ್ರಾರಂಭಿಸಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ಅಧಿಕಾರಿಗಳು ಸಬೂಬು ಹೇಳದೆ ಮೈ ಚಳಿ ಬಿಟ್ಟು ಕೆಲಸ ಮಾಡಬೇಕು ಎಂದು ಅವರು ತಾಕೀತು ಮಾಡಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ಮೈಸೂರು ವಿವಿಯ ರಿಜಿಸ್ಟ್ರಾರ್ ಟಿ.ವಿ.ವೆಂಕಟಾಚಲಶಾಸ್ತ್ರಿ, ಪೆÇ್ರ.ತಳವಾರ್, ಡಾ.ದುರ್ಗಾದಾಸ್, ಪ್ರೊ.ಎನ್.ಎಸ್.ತಾರಾನಾಥ್, ಸಿಐಐಎನ್ನ ನಿದೇರ್ಶಕ ಡಾ.ರಾವ್, ಹಾಗೂ ಪಿಎಂಬಿ ಸದಸ್ಯರು ಸೇರಿದಂತೆ ಅಧಿಕಾರಿಗಳ ಸಭೆಯಲ್ಲಿ ಉಪಸ್ಥಿತರಿದ್ದರು.