ಟಿ.ಬಿ. ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿ : ಡಿ.ಕೆ ಶಿವಕುಮಾರ್
'ಪರಮೇಶ್ವರ ನೇತೃತ್ವದಲ್ಲಿ ಶಿರಾ ಉಪಚುನಾವಣೆ'
ಬೆಂಗಳೂರು : 'ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿ.ಬಿ ಜಯಚಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದ್ದು, ಇವರ ಹೆಸರನ್ನೇ ಪಕ್ಷದ ವರಿಷ್ಠರಿಗೆ ಕಳುಹಿಸಿಕೊಡುತ್ತೇವೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಉಪಚುನಾವಣೆ ಹಿನ್ನೆಲೆಯಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ ಶಿವಕುಮಾರ್ ಅವರು ಪಕ್ಷದ ನಾಯಕರೊಂದಿಗೆ ಬುಧವಾರ ಸಭೆ ನಡೆಸಿದರು. ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು 'ಶಿರಾ ಉಪಚುನಾವಣೆಗೆ ಮಾಜಿ ಸಚಿವ ಟಿ.ಬಿ ಜಯಚಂದ್ರ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದ್ದೇವೆ. ರಾಜಣ್ಣ ಅವರೇ ಜಯಚಂದ್ರರ ಹೆಸರನ್ನು ಸೂಚಿಸಿದ್ದಾರೆ. ಅವರ ಅಭಿಪ್ರಾಯ ಪಡೆದಿದ್ದು, ಇದನ್ನೇ ಪಕ್ಷದ ಹೈಕಮಾಂಡ್ ಗೆ ಕಳುಹಿಸಿಕೊಡುತ್ತೇವೆ ಎಂದು ಹೇಳಿದರು.
'ಚುನಾವಣೆಗೆ ಸಂಬಂಧಿಸಿದಂತೆ ಇಂದು ತುಮಕೂರು ಜಿಲ್ಲೆಯ ನಾಯಕರ ಜೊತೆ ಸಮಾಲೋಚನೆ ನಡೆಸಲಾಯಿತು. ಶಿರಾ ಉಪಚುನಾವಣೆಯನ್ನು ಡಾ. ಜಿ. ಪರಮೇಶ್ವರ ಅವರ ನೇತೃತ್ವದಲ್ಲಿ ಎದುರಿಸಲು ತೀರ್ಮಾನಿಸಿದ್ದು, ಮಾಜಿ ಶಾಸಕ ಕೆ.ಎನ್ ರಾಜಣ್ಣ ಅವರು ಕೋಚೇರ್ಮನ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಎಲ್ಲ ನಾಯಕರು ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಇಂದಿನಿಂದ ಚುನಾವಣೆ ಕಾರ್ಯ ಪ್ರಾರಂಭ ಮಾಡುತ್ತೇವೆ ಎಂದು ಡಿಕೆಶಿ ಹೇಳಿದರು.